ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಲಸಿಗರ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವಿಡಿಯೋಗಳನ್ನು ಹರಿಬಿಡುವುದರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುವ ನೆಪದಲ್ಲಿ ಇಂತಹ ಚಟುವಟಿಕೆಗಳನ್ನು ನಡೆಸುವುದನ್ನು ನಿಲ್ಲಿಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಲಸಿಗರ ಕುರಿತು ಮಾಹಿತಿ ಸಂಗ್ರಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರಿಂದ ಅಂತರರಾಷ್ಟ್ರೀಯ ಜಾಲಗಳು ಎಚ್ಚೆತ್ತುಕೊಳ್ಳುವ ಸಾಧ್ಯತೆಯಿದೆ. ಇದರಿಂದ ಸರ್ಕಾರ ನಡೆಸುತ್ತಿರುವ ರಹಸ್ಯ ಕಾರ್ಯಾಚರಣೆಗಳಿಗೆ ಅಡ್ಡಿಯಾಗಬಹುದು. ಹೀಗಾಗಿ ಇಂತಹ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಬದಲು ನೇರವಾಗಿ ಪೊಲೀಸರಿಗೆ ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು ಎಂದು ಖರ್ಗೆ ಹೇಳಿದ್ದಾರೆ.
ಇಂತಹ ‘ವಿಜಿಲಾಂಟಿಸಂ’ ಅಥವಾ ‘ಮಾರಲ್ ಪೋಲಿಸಿಂಗ್’ ಅನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಿಜವಾದ ದೇಶಭಕ್ತರು ಹಾಗೂ ರಾಜ್ಯದ ಹಿತಾಸಕ್ತಿ ಬಯಸುವವರು ತಮ್ಮ ಬಳಿ ಇರುವ ಮಾಹಿತಿಯನ್ನು ಕಾನೂನುಬದ್ಧವಾಗಿ ಸಂಬಂಧಪಟ್ಟ ಇಲಾಖೆಗೆ ತಲುಪಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ಬಾಂಗ್ಲಾದೇಶ, ಆಫ್ರಿಕಾ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಂದಿರುವ ಸುಮಾರು 1,000 ವಲಸಿಗರನ್ನು ಸರ್ಕಾರ ಪತ್ತೆಹಚ್ಚಿದ್ದು, ಅವರನ್ನು ಎಫ್ಆರ್ಒಗೆ ಹಸ್ತಾಂತರಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಈ ವಿಚಾರದಲ್ಲಿ ಸರ್ಕಾರ ಬಿಎಸ್ಎಫ್ ಹಾಗೂ ಎಫ್ಆರ್ಒ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ವಲಸಿಗರ ವಿಚಾರದಲ್ಲಿ ಸರ್ಕಾರ ಶೇ.100ರಷ್ಟು ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪ್ರಚಾರ ಮಾಡುವುದರಿಂದ ಭದ್ರತಾ ವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.



