ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ನೆರವು ನೀಡಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.
ಗದಗ ಜಿಲ್ಲೆಗೆ ಬರ ಅಧ್ಯಯನಕ್ಕಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ವೇದಿಕೆ ವತಿಯಿಂದ ಸ್ವಾಗತಿಸಿ ಮನವಿ ಸಲ್ಲಿಸಲಾಯಿತು.
ಮಳೆ ಕೊರತೆಯಿಂದ ಪ್ರಸಕ್ತ ಸಾಲಿನ ಬೆಳೆಗಳು ಹಾನಿಗೊಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವರು ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ ಮನವಿ ಮಾಡಿದರು.
ಇದರೊಂದಿಗೆ 2025-26ನೇ ಸಾಲಿನ ಬೆಳೆ ಪರಿಹಾರ ಇನ್ನೂ ರೈತರ ಕೈ ಸೇರಿಲ್ಲ. ಬಾಕಿ ಇರುವ ಪರಿಹಾರವನ್ನು ಅರ್ಹ ರೈತರಿಗೆ ಶೀಘ್ರವಾಗಿ ವಿತರಿಸಬೇಕು. 2026-27ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯನ್ನೂ ನಿಖರವಾಗಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಬರ ಘೋಷಣೆ ಸೇರಿದಂತೆ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಗದಗ ಜಿಲ್ಲಾಧ್ಯಕ್ಷ ಸಣ್ಣೆಲಪ್ಪ ರಾಮಣ್ಣ ವಳಗೇರಿ, ಜಗದೀಶ ಕರಡಿಗುಡ್ಡ, ಕುಮಾರ ಲಮಾಣಿ, ಸಂತೋಷ ರಾಥೋಡ, ಚಂದ್ರು ಈಟಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

