HomeGadag Newsಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು

ಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಆ.15ರಂದು ಜಿಲ್ಲಾಮಟ್ಟದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣ, ಶಿಸ್ತುಬದ್ಧ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಶ್ರೀಧರ್ ಅವರ ನೇತೃತ್ವದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕ್ರಮದ ವಿವಿಧ ವ್ಯವಸ್ಥೆಗಳ ಕುರಿತು ಚರ್ಚಿಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಯಿತು.

ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಶಿಷ್ಟಾಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗಣ್ಯರು, ಜನಪ್ರತಿನಿಧಿಗಳು ಹಾಗೂ ಅತಿಥಿಗಳಿಗೆ ಆಮಂತ್ರಣ ಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸುವುದು, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಮುಖ್ಯ ಸಮಾರಂಭದ ವೇದಿಕೆಯನ್ನು ಆಕರ್ಷಕವಾಗಿ ಸಿದ್ಧಪಡಿಸುವುದರೊಂದಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಅತಿಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾಂಗಣದ ಒಳ ಹಾಗೂ ಹೊರ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಸೂಚಿಸಲಾಯಿತು.

ಮಕ್ಕಳ ಸುರಕ್ಷತೆಗೆ ಆದ್ಯತೆ

ಸ್ವಾತಂತ್ರ್ಯೋತ್ಸವಕ್ಕೆ ವಿವಿಧ ಶಾಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕ್ರೀಡಾಂಗಣಕ್ಕೆ ಕರೆತಂದು, ಕಾರ್ಯಕ್ರಮ ಮುಗಿದ ಬಳಿಕ ಯಾವುದೇ ತೊಂದರೆಯಾಗದಂತೆ ಮರಳಿ ಕಳುಹಿಸುವ ಕುರಿತು ವಿಶೇಷ ಚರ್ಚೆ ನಡೆಯಿತು. ಶಿಕ್ಷಣ, ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರಿಗೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಲಾಯಿತು.

ಪಥಸಂಚಲನಕ್ಕೆ ಪೂರ್ವಾಭ್ಯಾಸ

ಸಮಾರಂಭದ ಪ್ರಮುಖ ಆಕರ್ಷಣೆಯಾದ ಪಥಸಂಚಲನವನ್ನು ಶಿಸ್ತುಬದ್ಧವಾಗಿ ಹಾಗೂ ಆಕರ್ಷಕವಾಗಿ ಆಯೋಜಿಸಲು ಪೂರ್ವಾಭ್ಯಾಸ ನಡೆಸುವಂತೆ ತಿಳಿಸಲಾಯಿತು. ಪೊಲೀಸ್ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ಶಾಲಾ ಮಕ್ಕಳು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಹಾಗೂ ಸಚಿವರ ಸ್ವಾತಂತ್ರ್ಯೋತ್ಸವ ಸಂದೇಶದ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲೆಯ ಅಭಿವೃದ್ಧಿ, ಜನಪರ ಯೋಜನೆಗಳು, ಸ್ವಾತಂತ್ರ್ಯ ಹೋರಾಟದ ಮೌಲ್ಯಗಳು, ರಾಷ್ಟ್ರೀಯ ಏಕತೆ ಮತ್ತು ದೇಶಭಕ್ತಿಯ ಸಂದೇಶ ಒಳಗೊಂಡಂತೆ ಭಾಷಣ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಸ್ವಾತಂತ್ರ್ಯೋತ್ಸವದ ಪ್ರತಿಯೊಂದು ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಶಿಷ್ಟಾಚಾರ ಪಾಲನೆಯೊಂದಿಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಅವಧಿಯೊಳಗೆ ಸಿದ್ಧತೆ ಪೂರ್ಣಗೊಳಿಸಬೇಕು.”

— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img