ಹುಬ್ಬಳ್ಳಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್ಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಗೊಂದಲವೂ ಹೆಚ್ಚಾಗಿದೆ. ಕಾವೇರಿ ನೀರಿನ ಸಮಸ್ಯೆ ಸದ್ಯಕ್ಕೆ ತಗ್ಗಿರುವ ಹಿನ್ನೆಲೆಯಲ್ಲಿ ಬಂದ್ ಅಗತ್ಯವಿಲ್ಲ ಎಂದು ಕೆಲ ಸಂಘಟನೆಗಳು ಹಿಂದೆ ಸರಿದಿದ್ದರೆ, ಮತ್ತೊಂದೆಡೆ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪಟ್ಟು ಹಿಡಿದಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡಿನ ನಡೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಈ ಹಿಂದೆ ತೀವ್ರ ಹೋರಾಟ ನಡೆಸಿದ್ದವು. ಇದರ ಮುಂದುವರಿದ ಭಾಗವಾಗಿ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಆದರೆ, ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನೀರಿನ ಸಮಸ್ಯೆ ಸದ್ಯಕ್ಕೆ ಕೊಂಚ ತಗ್ಗಿದ್ದು, ಎರಡೂ ರಾಜ್ಯಗಳ ರೈತರಿಗೆ ನೆಮ್ಮದಿ ಮೂಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು, ಖಾಸಗಿ ಶಾಲೆಗಳು ಹಾಗೂ ವ್ಯಾಪಾರ ವಹಿವಾಟುದಾರರು ಬಂದ್ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಆಗಸ್ಟ್ 13ರ ಬಂದ್ ಕುರಿತು ಗೊಂದಲ ಮತ್ತಷ್ಟು ಹೆಚ್ಚಾಗಿದೆ.
ಬಂದ್ ನಿರ್ಧಾರದಿಂದ ಹಿಂದೆ ಸರಿಯದ ವಾಟಾಳ್ ನಾಗರಾಜ್, ಕಾವೇರಿ ನೀರಿನ ಜೊತೆಗೆ ಮೇಕೆದಾಟು ಮತ್ತು ಮಹದಾಯಿ ವಿಚಾರಗಳಿಗೂ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ವಾಟಾಳ್ ನಾಗರಾಜ್, ಮಹದಾಯಿ ಹೋರಾಟಗಾರರು ಹಾಗೂ ರೈತಪರ ಸಂಘಟನೆಗಳ ಬೆಂಬಲ ಕೋರಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಸಾಂಕೇತಿಕ ಹೋರಾಟ ನಡೆಸಿ, ಬಳಿಕ ಸಭೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, “ಯಾರು ಬೆಂಬಲ ನೀಡಲಿ, ಬಿಡಲಿ ಬಂದ್ ಮಾಡೇ ಮಾಡುತ್ತೇವೆ. ವಿಭಿನ್ನ ರೀತಿಯಲ್ಲಿ ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಬೆಳಗಾವಿಯಿಂದ ಚಾಮರಾಜನಗರದವರೆಗೂ ಬಂದ್ಗೆ ಬೆಂಬಲವಿದೆ” ಎಂದು ಹೇಳಿದ್ದಾರೆ.



