ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜತೆಗೆ ಉದ್ಯಮಶೀಲತೆಯ ಜ್ಞಾನವನ್ನೂ ಪಡೆದುಕೊಂಡು ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತೆಯತ್ತ ಹೆಜ್ಜೆ ಇಡಬೇಕು ಎಂದು ಗದಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎನ್.ಎಸ್. ಕುಲಕರ್ಣಿ ಹೇಳಿದರು.
ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಆಯೋಜಿಸಿದ್ದ ಮೂರು ದಿನಗಳ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯಮಶೀಲತಾ ತರಬೇತಿ ಮತ್ತು ಕಾರ್ಯಾಗಾರಗಳ ಮೂಲಕ ಯುವಜನರಿಗೆ ಸ್ವಯಂ ಉದ್ಯೋಗದ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಸದುಪಯೋಗ ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು.
ಹುಲಕೋಟಿ ರೂರಲ್ ಎಂಜಿನಿಯರಿಂಗ್ ಕಾಲೇಜಿನ ಡಾ. ಶರಣಬಸವರಾಜ ಅಂಗಡಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿರಂತರ ಪ್ರಯತ್ನ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆ ಅಳವಡಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಸಿಡಾಕ್ ಧಾರವಾಡ ವಲಯದ ಜಂಟಿ ನಿರ್ದೇಶಕ ಚಂದ್ರಶೇಖರ ಅಂಗಡಿ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸಾರಿಕಾ ಪಾಟೀಲ ಮಾತನಾಡಿ, ಖಾಸಗಿ ವಲಯದಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ನಿರಂತರವಾಗಿ ಹೆಚ್ಚಿಸಿಕೊಳ್ಳಬೇಕು ಎಂದರು.
ಉದ್ಯಮಿದಾರೆ ಶಕುಂತಲಾ ಮುಳಗುಂದ ಅವರು ಉದ್ಯಮಶೀಲತಾ ತರಬೇತಿಯಿಂದ ಸ್ಫೂರ್ತಿ ಪಡೆದು ಉದ್ಯಮ ಆರಂಭಿಸಿ ಬೆಳೆಸಿಕೊಂಡ ತಮ್ಮ ಅನುಭವ ಹಂಚಿಕೊಂಡರು. ಆತ್ಮವಿಶ್ವಾಸ, ಸಾಮುದಾಯಿಕ ಸಹಕಾರ ಹಾಗೂ ವಿನೂತನ ಚಿಂತನೆಯಿಂದ ಯಶಸ್ಸು ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಪ್ರವೀಣ ದೇಶಪಾಂಡೆ ಹಾಗೂ ಎಸ್ಬಿಐ ಗದಗ ಶಾಖೆಯ ವ್ಯವಸ್ಥಾಪಕ ಹರೀಶ್ ಎಸ್. ಅವರು ಉದ್ಯಮ ಆರಂಭಿಸುವ ವಿಧಾನ, ಹಣಕಾಸು ಹಾಗೂ ಬ್ಯಾಂಕಿಂಗ್ ಸೌಲಭ್ಯ ಸೇರಿದಂತೆ ಹಲವು ಪ್ರಾಯೋಗಿಕ ವಿಷಯಗಳ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಅಪ್ಪಣ್ಣ ಹಂಜೆ, ಲಭ್ಯವಿರುವ ಸಂಪನ್ಮೂಲ ಹಾಗೂ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉದ್ಯಮಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಉದ್ಯೋಗ ಮಾಹಿತಿ ಕೋಶದ ಸಂಯೋಜಕ ಡಾ. ಶ್ರೀಶವಿಠ್ಠಲ, ಸಿಡಾಕ್ ತರಬೇತುದಾರ ಮಂಜುನಾಥ ಮುಳಗುಂದ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಲಕ್ಷ್ಮಣ ಚನ್ನವೀರಪ್ಪ ಮುಳಗುಂದ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ. ಅಂತಿಮ ವರ್ಷದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದರು.
“ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜತೆಗೆ ಉದ್ಯಮಶೀಲತೆಯ ಜ್ಞಾನವನ್ನೂ ಪಡೆದುಕೊಂಡು ಸ್ವಯಂ ಉದ್ಯೋಗ ಹಾಗೂ ಉದ್ಯಮಶೀಲತೆಯತ್ತ ಹೆಜ್ಜೆ ಇಡಬೇಕು. ಇಂತಹ ತರಬೇತಿಗಳ ಸದುಪಯೋಗ ಪಡೆದುಕೊಂಡು ತಮ್ಮ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು.”
— ಎನ್.ಎಸ್. ಕುಲಕರ್ಣಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಗದಗ



