ಗದಗ: ನಗರೋತ್ಥಾನ ಕಾಮಗಾರಿಯ ಬಿಲ್ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯ ಕಂಪ್ಯೂಟರ್ ಹಾಗೂ ಪೀಠೋಪಕರಣಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

2012–13ರ ಅವಧಿಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ, ಮುಂಡರಗಿ ಹಾಗೂ ಮುಳಗುಂದ ಪಟ್ಟಣಗಳಲ್ಲಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಗುತ್ತಿಗೆದಾರ ಎಸ್.ಎಸ್. ಪೊಲೀಸ್ ಪಾಟೀಲ ಅವರು ಸುಮಾರು ₹15 ಕೋಟಿ ವೆಚ್ಚದ ಕಾಮಗಾರಿಗಳನ್ನು ನಿರ್ವಹಿಸಿದ್ದರು ಎನ್ನಲಾಗಿದೆ.
ಈ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಸುಮಾರು ₹18 ಲಕ್ಷ ಬಿಲ್ ಬಾಕಿ ಉಳಿದಿತ್ತು. ಬಾಕಿ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ಬಳಿಕ ಬಾಕಿ ಮೊತ್ತದ ಹಿನ್ನೆಲೆಯಲ್ಲಿ ಸುಮಾರು ₹40 ಲಕ್ಷ ಪಾವತಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಈ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಪ್ತಿ ಆದೇಶ ನೀಡಿದೆ ಎನ್ನಲಾಗಿದೆ. ಕಚೇರಿಯ ಕಂಪ್ಯೂಟರ್, ಪೀಠೋಪಕರಣ ಜಪ್ತಿ
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಕಂಪ್ಯೂಟರ್ ಹಾಗೂ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.
ಬಿಲ್ ಪಾವತಿಗೆ ಸಂಬಂಧಿಸಿದ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ಜಪ್ತಿ ಕ್ರಮ ನಡೆದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

