ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಆ.15ರಿಂದ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದ್ದಾರೆ.
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಆ.15ರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗುತ್ತಿದ್ದು, ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ಜಾಬ್ ಕಾರ್ಡ್ ಪರಿಶೀಲನೆ, ಹೊಸ ಕಾರ್ಡ್ಗೆ ಅವಕಾಶ
ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅರ್ಹರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿಕೊಡುವುದು, ಹಳೆಯ ಕಾರ್ಡ್ ನವೀಕರಣ, e-KYC ಪೂರ್ಣಗೊಳಿಸುವುದು ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವುದಕ್ಕೆ ಮೇಳದಲ್ಲಿ ಆದ್ಯತೆ ನೀಡಲಾಗುವುದು.
ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನೂ ಗ್ರಾಮ ಪಂಚಾಯಿತಿಗಳಲ್ಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದರ ಜತೆಗೆ ಮನೆ-ಮನೆಗೆ ಭೇಟಿ ನೀಡಿ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮಮಟ್ಟದಲ್ಲಿ ಸಭೆ ನಡೆಸುವುದು, ಪೋಸ್ಟರ್–ಬ್ಯಾನರ್ಗಳ ಮೂಲಕ ಜಾಗೃತಿ ಮೂಡಿಸುವುದು ಹಾಗೂ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದರು.
ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸಲು ಒತ್ತು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
“ಉದ್ಯೋಗದ ಅವಕಾಶವನ್ನು ಅರ್ಹ ಕುಟುಂಬಗಳ ಮನೆಬಾಗಿಲಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್ ಕಾರ್ಡ್, e-KYC ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಕುರಿತು ಮಾಹಿತಿ ಅಗತ್ಯವಿರುವವರು ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದು ಉದ್ಯೋಗದ ಬೇಡಿಕೆ ಸಲ್ಲಿಸಿ, ಸ್ಥಳೀಯ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.”
ಚಂದ್ರಶೇಖರ ಬಿ. ಕಂದಕೂರ
ಕಾರ್ಯನಿರ್ವಾಹಕ ಅಧಿಕಾರಿ, ತಾಪಂ ರೋಣ–ಗಜೇಂದ್ರಗಡ



