ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳ ಪಾತ್ರ ಅನನ್ಯವಾಗಿದ್ದು, ಅವರ ತ್ಯಾಗ ಮತ್ತು ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ಉನ್ನತ ಶಿಕ್ಷಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಇತಿಹಾಸ ರೋಚಕವಾಗಿದೆ. 1857ರಿಂದಲೇ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಕೊಂಡಿತ್ತು. ನರಗುಂದದ ಬಾಬಾಸಾಹೇಬ, ಮುಂಡರಗಿಯ ಭೀಮರಾವ್, ಡಂಬಳದ ಕೆಂಚನಗೌಡ್ರ, ಅನಂತರಾವ್ ಜಾಲಿಹಾಳ, ಡಾ. ವಾಸುದೇವರಾವ್ ಉಮಚಗಿ, ಬೆಟಗೇರಿಯ ತ್ರಿಮಲ್ಲೆ, ಮಳೇಕರ, ಜಯರಾಮಾಚಾರ್ಯ ಮಳಗಿ, ಡಂಬಳದ ಶ್ರೀನಿವಾಸರಾವ್ ಕಳ್ಳಿ, ತಿಪ್ಪಣ್ಣ ಶಾಸ್ತ್ರಿ, ಅಂದಾನಪ್ಪ ದೊಡ್ಡಮೇಟಿ, ಕೌತಾಳ ವೀರಪ್ಪ, ಕೆ.ಎಚ್. ಪಾಟೀಲ ಸೇರಿದಂತೆ ಅಸಂಖ್ಯಾತ ಹೋರಾಟಗಾರರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದರು.
ದೇಶಭಕ್ತ ಮೈಲಾರ ಮಹದೇವಪ್ಪ ಅವರ ನೇತೃತ್ವದಲ್ಲಿ ಕೋಗನೂರು, ಶಿಗ್ಲಿ, ಹೆಬ್ಬಾಳ, ನಾಗರಮಡುವು, ವರವಿ, ಹೊಸೂರು, ಅಂಕಲಿ ಸೇರಿದಂತೆ ಹಲವು ಗ್ರಾಮಗಳ ಹೋರಾಟಗಾರರು ಚಳವಳಿಯಲ್ಲಿ ಧುಮುಕಿ ಅಪಾರ ತ್ಯಾಗ ಮಾಡಿದ್ದಾರೆ. 1942ರ ‘ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿಯೂ ಗದಗ ಜಿಲ್ಲೆ ಸಂಪೂರ್ಣವಾಗಿ ತೊಡಗಿಸಿಕೊಂಡಿತ್ತು. ಡಾ. ಬಿ.ಜಿ. ಹುಲಗಿ, ಶಂಕ್ರಪ್ಪ ಗುಡ್ಡದ, ಇಸ್ಮಾಯಿಲ ಸಾಹೇಬ, ಕಲ್ಲೂರ ರಾಮಾಚಾರಿ, ವೆಂಕಟೇಶ ಮಾಗಡಿ, ಕೋಗನೂರ ನಿಂಗಪ್ಪ ಸೇರಿದಂತೆ ಅನೇಕರು ಕಠಿಣ ಶಿಕ್ಷೆ ಅನುಭವಿಸಿದರು ಎಂದು ಸ್ಮರಿಸಿದರು.
ಸಾಹಿತ್ಯ–ಸಂಸ್ಕೃತಿಯ ಶ್ರೀಮಂತ ಪರಂಪರೆ
ಗದಗ ಜಿಲ್ಲೆ ಸ್ವಾತಂತ್ರ್ಯ ಹೋರಾಟ ಮಾತ್ರವಲ್ಲದೆ ಸಾಹಿತ್ಯ, ಸಂಗೀತ, ಸಂಸ್ಕೃತಿ ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡಿದೆ. ಪಂಪ, ನಾಗವರ್ಮ, ಕುಮಾರವ್ಯಾಸ, ಚಾಮರಸ, ಮುಕ್ತಾಯಕ್ಕರಿಂದ ಹಿಡಿದು ಕೀರ್ತಿನಾಥ ಕುರ್ತಕೋಟಿ, ಚನ್ನವೀರ ಕಣವಿ, ಗಿರಡ್ಡಿ ಗೋವಿಂದರಾಜ, ಎನ್.ಕೆ. ಕುಲಕರ್ಣಿ, ಮಾಧವ ಕುಲಕರ್ಣಿ, ಎಚ್.ಎನ್. ಹೂಗಾರ, ರಾಜಶೇಖರ ಭೂಸನೂರಮಠ, ಭಾರತರತ್ನ ಪಂಡಿತ ಭೀಮಸೇನ ಜೋಶಿ, ಪಂಚಾಕ್ಷರಿ ಗವಾಯಿಗಳು, ಡಾ. ಪುಟ್ಟರಾಜ ಕವಿ ಗವಾಯಿಗಳು ಹಾಗೂ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರೆಗೆ ಜಿಲ್ಲೆಯ ಸಾಧಕರ ಪರಂಪರೆ ದೊಡ್ಡದಾಗಿದೆ ಎಂದರು.
ರಾಜ್ಯ ಸರ್ಕಾರ ವಿವಿಧ ಹಂತಗಳಲ್ಲಿ ಸುಮಾರು ₹1.20 ಲಕ್ಷ ಕೋಟಿ ಮೊತ್ತದ ಸಬ್ಸಿಡಿ ನೀಡುತ್ತಿದೆ. ರಾಜ್ಯದ ಸುಮಾರು 36.10 ಲಕ್ಷ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಸಾಲ ವಿತರಿಸಲಾಗುತ್ತಿದೆ ಎಂದರು.
ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವುದರ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು. ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಜಿಲ್ಲೆಯ ಹೆಮ್ಮೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶಿಕ್ಷಣ, ಸಂಶೋಧನೆ ಮತ್ತು ತರಬೇತಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ನೈಸರ್ಗಿಕ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಬಸವರಾಜ ರಾಯರಡ್ಡಿ ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಡಾ. ಎಚ್.ಕೆ. ಪಾಟೀಲ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ್ ಕೆ., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಗದಗ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳ ಹೋರಾಟ ಮತ್ತು ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.”
ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು



