ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಪರಿಸ್ಥಿತಿ ಹಾಗೂ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಟೆಲಿವಿಷನ್ ಚರ್ಚೆಗಳಲ್ಲಿ ಬಿಜೆಪಿಯ ಪ್ರಮುಖ ಹಾಗೂ ಹೆಚ್ಚು ಕಾಣಿಸಿಕೊಳ್ಳುವ ವಕ್ತಾರರಲ್ಲೊಬ್ಬರಾಗಿದ್ದ ಶೆಹಜಾದ್ ಪೂನವಾಲಾ, ಜುಲೈ 30ರಂದು ಮೊದಲ ಬಾರಿಗೆ ರಾಜೀನಾಮೆ ಪತ್ರವನ್ನು ಪಕ್ಷಕ್ಕೆ ಕಳುಹಿಸಿದ್ದರು. ಆದರೆ, ಬಿಜೆಪಿ ಅವರ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ವತಿಯಿಂದ ಸಲಹೆ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ದೀರ್ಘ ಹಾಗೂ ಕಠಿಣ ಚಿಂತನೆಯ ಬಳಿಕ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದಾಗಿ ಶೆಹಜಾದ್ ಪೂನವಾಲಾ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ, ರಾಷ್ಟ್ರೀಯ ವಕ್ತಾರ ಸ್ಥಾನ ಹಾಗೂ ಬಿಜೆಪಿಯ ಸಕ್ರಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ತಮ್ಮ ರಾಜೀನಾಮೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶೆಹಜಾದ್ ಪೂನವಾಲಾ ಕೃತಜ್ಞತೆ ಸಲ್ಲಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪಕ್ಷ ನೀಡಿದ ವೇದಿಕೆ ಹಾಗೂ ಅವಕಾಶಗಳಿಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿರುವ ಅವರು, ಪ್ರೀತಿ, ವಾತ್ಸಲ್ಯ ಹಾಗೂ ಅತ್ಯುನ್ನತ ಗೌರವದ ಭಾವನೆಯೊಂದಿಗೆ ಪಕ್ಷಕ್ಕೆ ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಶೆಹಜಾದ್ ಪೂನವಾಲಾ ಅವರು ತಮ್ಮ ರಾಜಕೀಯ ಪ್ರಯಾಣವನ್ನು ಕಾಂಗ್ರೆಸ್ನೊಂದಿಗೆ ಆರಂಭಿಸಿದ್ದರು. ಬಳಿಕ ಬಿಜೆಪಿ ಸೇರ್ಪಡೆಯಾಗಿ ಪಕ್ಷದ ಪ್ರಮುಖ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿರುವ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.



