ಕೊಪ್ಪಳ, ಆಗಸ್ಟ್ 17: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಭಾರೀ ಹಣಕಾಸು ಅಕ್ರಮ ಇದೀಗ ಬಯಲಾಗಿದೆ. ಆಡಿಟ್ ವೇಳೆ ₹8.43 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಪತ್ತೆಯಾಗಿದ್ದು, ಪ್ರಾಧಿಕಾರದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿರುವ ಶಂಕೆ ತನಿಖೆಗೆ ವೇಗ ನೀಡಿದೆ.
ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗದ ಅವಧಿಯನ್ನೇ ಆರೋಪಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. 2022-23ರ ಅವಧಿಯಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ಅಧ್ಯಕ್ಷರಿಲ್ಲದ ಪರಿಸ್ಥಿತಿ ಇತ್ತು. ಇದೇ ಸಂದರ್ಭದಲ್ಲಿ ಕೊಪ್ಪಳದ ವಿವಿಧ ಬ್ಯಾಂಕ್ಗಳಲ್ಲಿ ಪ್ರಾಧಿಕಾರದ ಹೆಸರಿನಲ್ಲಿ ಅನಧಿಕೃತ ಖಾತೆಗಳನ್ನು ತೆರೆಯಲಾಗಿದೆ ಎಂಬ ಆರೋಪವಿದೆ.
ಈ ಖಾತೆಗಳ ಮೂಲಕ ಒಟ್ಟು ₹8.43 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆಡಿಟ್ನಲ್ಲಿ ಬೆಳಕಿಗೆ ಬಂದಿದೆ. ಇಷ್ಟು ದೊಡ್ಡ ಮೊತ್ತದ ಹಣದ ವರ್ಗಾವಣೆ ಒಬ್ಬ ವ್ಯಕ್ತಿಯ ಕೈಚಳಕದಿಂದ ಮಾತ್ರ ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಹಿಂದೆ ಸಂಘಟಿತ ಜಾಲವಿರುವ ಸಾಧ್ಯತೆಯ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿ ಗುರುತಿಸಿಕೊಂಡಿದ್ದಾನೆ. ಹೊಸಪೇಟೆಯಲ್ಲಿ ಇದ್ದುಕೊಂಡೇ ಕೊಪ್ಪಳ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈತ, ತಾನು ಸರ್ಕಾರಿ ನೌಕರನೆಂದು ಬಿಂಬಿಸಿಕೊಂಡಿದ್ದ ಎನ್ನುವ ಆರೋಪವೂ ಇದೆ.
ನಕಲಿ ಖಾತೆಗಳನ್ನು ಯಾರು ತೆರೆದರು? ಅವುಗಳಿಗೆ ಅನುಮತಿ ನೀಡಿದವರು ಯಾರು? ₹8.43 ಕೋಟಿ ಹಣವನ್ನು ಯಾವ ಖಾತೆಗಳಿಗೆ ವರ್ಗಾಯಿಸಲಾಗಿದೆ? ಅಂದಿನ ಅಧಿಕಾರಿಗಳ ಪಾತ್ರವೇನು? ಎಂಬ ಪ್ರಶ್ನೆಗಳಿಗೆ ತನಿಖೆಯ ಮೂಲಕ ಉತ್ತರ ಸಿಗಬೇಕಿದೆ.
ಸದ್ಯ ರವೀಂದ್ರ ಕುಮಾರ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಕ್ರಮ ವರ್ಗಾವಣೆಯ ಸಂಪೂರ್ಣ ವಿವರ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ತನಿಖಾ ತಂಡ ಮಾಹಿತಿ ಕಲೆಹಾಕುತ್ತಿದೆ.



