ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ ನಡೆದಿದೆ. ಜಮೀನಿನಲ್ಲಿ ಕಸ ತೆಗೆಯುತ್ತಿದ್ದ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿದ ಪರಿಣಾಮ ಸತ್ಯವ್ವ ಶಿಂಗೆ (43) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಗಿದ್ದ ಹಾವು ಏಕಾಏಕಿ ಸತ್ಯವ್ವ ಅವರಿಗೆ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸಿ ತೀವ್ರ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ನಾಗರಪಂಚಮಿ ಹಬ್ಬದ ಸಂಭ್ರಮದಲ್ಲಿದ್ದ ರಾಯಬಾಗ ಪಟ್ಟಣದಲ್ಲಿ ಈ ದುರಂತದಿಂದ ವಿಷಾದದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ, ಶಿವಮೊಗ್ಗ ತಾಲೂಕಿನ ಉಂಬಳಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟವೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.
ಉಂಬಳಬೈಲು ಗ್ರಾಮದ ಪ್ರಮೋದ್ ಎಂಬುವವರ ತೋಟದಲ್ಲಿ ದಿಢೀರ್ ಹೆಬ್ಬಾವು ಕಾಣಿಸಿಕೊಂಡಿದ್ದು, ತೋಟದ ಕಾರ್ಮಿಕರು ಹಾಗೂ ಸ್ಥಳೀಯರು ಭಯಭೀತರಾಗಿದ್ದರು. ಮಾಹಿತಿ ತಿಳಿದ ತಕ್ಷಣ ಆರ್ಎಫ್ಒ ಪ್ರದೀಪ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು.
ಹೆಬ್ಬಾವಿಗೆ ಯಾವುದೇ ಗಾಯವಾಗದಂತೆ ಎಚ್ಚರಿಕೆಯಿಂದ ಸೆರೆಹಿಡಿದ ಅರಣ್ಯ ಸಿಬ್ಬಂದಿ, ಬಳಿಕ ಅದನ್ನು ಸುರಕ್ಷಿತವಾಗಿ ದಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ರಕ್ಷಿಸಿದ ಅರಣ್ಯಾಧಿಕಾರಿ ಪ್ರದೀಪ್ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

