ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್ ರೆಡ್ಡಿ ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. 2026ರ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಖನಿಜ ಹಕ್ಕುಗಳು ಹಾಗೂ ಖನಿಜ ಸಮೃದ್ಧ ಭೂಮಿಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಸಾಂವಿಧಾನಿಕ ಅಧಿಕಾರವನ್ನು ನಿರ್ಬಂಧಿಸುವ ಮಸೂದೆಯ ನಿಬಂಧನೆಗಳ ಬಗ್ಗೆ ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಪಟ್ಟಿಯ 49 ಮತ್ತು 50ನೇ ನಮೂದುಗಳ ಅಡಿಯಲ್ಲಿ ರಾಜ್ಯಗಳ ಶಾಸಕಾಂಗ ಮತ್ತು ಹಣಕಾಸು ಅಧಿಕಾರಗಳನ್ನು ದೃಢಪಡಿಸಿದ್ದ ಸುಪ್ರೀಂ ಕೋರ್ಟ್ನ 2024ರ ಮಹತ್ವದ ತೀರ್ಪನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರದ ಈ ಏಕಪಕ್ಷೀಯ ನಿಲುವು ಭಾರತದ ಒಕ್ಕೂಟ ವ್ಯವಸ್ಥೆಗೆ ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಡಿಸಿಎಂ, ಎಲ್ಲಾ ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ನಡೆಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಖನಿಜ ಹಿತಾಸಕ್ತಿ ಹಾಗೂ ರಾಜ್ಯಗಳ ಹಣಕಾಸು ಸ್ವಾಯತ್ತತೆ ಎರಡನ್ನೂ ರಕ್ಷಿಸುವ ಒಕ್ಕೂಟ ಸಹಕಾರದ ತತ್ವವನ್ನು ಎತ್ತಿಹಿಡಿಯಬೇಕು ಮತ್ತು ಒಮ್ಮತ ಆಧಾರಿತ ಚೌಕಟ್ಟನ್ನು ರೂಪಿಸಬೇಕು ಎಂದು ಪರಮೇಶ್ವರ್ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.



