HomeGadag Newsಅರ್ಹರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸಿ: ಮಿಥುನ್ ಜಿ. ಪಾಟೀಲ

ಅರ್ಹರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸಿ: ಮಿಥುನ್ ಜಿ. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ರೋಣ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಲಾಭ ಪಡೆಯುತ್ತಿರುವ ಅನರ್ಹರು ಹಾಗೂ ಮೃತಪಟ್ಟ ಫಲಾನುಭವಿಗಳ ಕುರಿತು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ವಹಿಸಬೇಕು ಎಂದು ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ರೋಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆಯಡಿ ತಾಲೂಕಿನಲ್ಲಿ 38,422 ಪಡಿತರ ಚೀಟಿಗಳಿದ್ದು, 38,278 ಅರ್ಜಿಗಳು ನೋಂದಣಿಯಾಗಿವೆ. ಈ ಪೈಕಿ 34,528 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ.90.20ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮನೆಮನೆ ಪರಿಶೀಲನೆಯಲ್ಲಿ 945 ಫಲಾನುಭವಿಗಳು ಮೃತಪಟ್ಟಿರುವುದು ಹಾಗೂ 248 ಮಂದಿ ಜಿಎಸ್‌ಟಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ಮನೆಯ ಯಜಮಾನಿ ಮೃತಪಟ್ಟಿದ್ದರೆ ರೇಷನ್ ಕಾರ್ಡ್‌ನಲ್ಲಿ ಅಗತ್ಯ ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಗೃಹಲಕ್ಷ್ಮೀ ಕಂತು ಜಮೆಯಾಗುವ ಮುನ್ನವೇ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಬೇಕು. ಅರ್ಹರು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅಧ್ಯಕ್ಷರು ಸೂಚಿಸಿದರು.

ಅನ್ನಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ 12 ನಿಯಮಗಳ ಬ್ಯಾನರ್ ಅಳವಡಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಅನುಷ್ಠಾನವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಲಾಯಿತು. 75 ವರ್ಷ ಮೇಲ್ಪಟ್ಟವರಿಗೆ ಹೆಬ್ಬೆಟ್ಟು ಗುರುತಿನ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಒಟಿಪಿ ಮೂಲಕ ಪಡಿತರ ಪಡೆಯುವ ಅವಕಾಶದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಪ್ರತಿ ತಿಂಗಳು 25ರ ನಂತರ ಪಡಿತರ ವಿತರಣೆ ಆರಂಭವಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಮಿತಿ ಸದಸ್ಯ ಬಿ.ಎಸ್. ರಡ್ಡೇರ ಗಮನ ಸೆಳೆದರು. ಗೋದಾಮಿನಿಂದ ಪಡಿತರ ಎತ್ತುವಳಿ ವಿಳಂಬವಾಗುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ ಹೆಸ್ಕಾಂ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮರುಸಮೀಕ್ಷೆ ಶೇ.86ರಷ್ಟು ಪೂರ್ಣಗೊಂಡಿದೆ. ಉಳಿದವರ ಸಮೀಕ್ಷೆಯನ್ನು ಮನೆಮನೆಗೆ ತೆರಳಿ ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಯೋಜನೆಯಿಂದ ಹೆಸರು ಹೊರಗುಳಿಯದಂತೆ ಅಗತ್ಯ ದಾಖಲೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಲಾಯಿತು.

ವಿದ್ಯುತ್ ಸಲಹಾ ಸಮಿತಿ ಸಭೆಗಳ ಮಾಹಿತಿ ಸದಸ್ಯರಿಗೆ ದೊರೆಯುತ್ತಿಲ್ಲ ಎಂದು ಶಿವಪ್ಪ ಗಾಣಿಗೇರ ಆಕ್ಷೇಪ ವ್ಯಕ್ತಪಡಿಸಿದರು. ಸಾರ್ವಜನಿಕರ ವಿದ್ಯುತ್ ಸಮಸ್ಯೆಗಳನ್ನು ಇಲಾಖೆಯ ಗಮನಕ್ಕೆ ತರಲು ಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಶಕ್ತಿ ಯೋಜನೆಯಡಿ ರೋಣ–ಅಬ್ಬಿಗೇರಿ ಮಾರ್ಗದಲ್ಲಿ ಬೆಳಗ್ಗೆ 6 ಹಾಗೂ ಸಂಜೆ 5.30ಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಯಿತು. ರೋಣ–ಸವಡಿ ಮಾರ್ಗವಾಗಿ ಗದಗಕ್ಕೆ ತೆರಳುವ ಬಸ್‌ಗಳಲ್ಲಿ ಹೆಚ್ಚಿನ ಜನದಟ್ಟಣೆ ಇರುವುದರಿಂದ ಹೆಚ್ಚುವರಿ ಬಸ್ ಕಲ್ಪಿಸುವಂತೆ ಬಸವರಾಜ ತಳವಾರ ಮನವಿ ಮಾಡಿದರು.

ರೋಣ–ಹೊಸಳ್ಳಿ–ಇಟಗಿ ಮಾರ್ಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಶಾಲಾ ಸಮಯದಲ್ಲಿ ನಿಗದಿತ ಸ್ಥಳಗಳಲ್ಲಿ ಬಸ್ ನಿಲ್ಲಿಸುವಂತೆ ಬಿ.ಎಸ್. ರಡ್ಡೇರ ಮನವಿ ಮಾಡಿದರು. ಮಹಿಳಾ ಪ್ರಯಾಣಿಕರಿದ್ದರೂ ಕೆಲವೆಡೆ ಬಸ್ ನಿಲ್ಲಿಸದಿರುವ ಕುರಿತು ನಾಜಬೇಗಂ ಯಲಿಗಾರ ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಿ ಸೂಕ್ತ ತಿಳುವಳಿಕೆ ನೀಡುವಂತೆ ಅಧ್ಯಕ್ಷರು ಸೂಚಿಸಿದರು.

ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆಯೂ ಘಟಕ ನಿರ್ವಾಹಕರಿಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

“ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಕಾಲಕ್ಕೆ ತಲುಪಬೇಕು. ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಸೌಲಭ್ಯ ಮುಂದುವರಿಯದಂತೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸಬೇಕು.” ಎಂದು ಮಿಥುನ್ ಜಿ. ಪಾಟೀಲ ಹೇಳಿದರು.

— ಮಿಥುನ್ ಜಿ. ಪಾಟೀಲ, ಅಧ್ಯಕ್ಷರು, ತಾಲೂಕು ಗ್ಯಾರಂಟಿ ಸಮಿತಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img