ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮಹಿಳೆಯರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗಿರಿಜಮ್ಮ ಹಾರೋಗೇರಿ ಹೇಳಿದರು.
ತಾಲೂಕಿನ ಹುಲಕೋಟಿಯ ಸ್ವಯಂಸಿದ್ಧಿ ಭವನದಲ್ಲಿ ಶನಿವಾರ ತಾಲೂಕು ಜೀವನೋಪಾಯ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರು ತಮ್ಮ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವುದರ ಜತೆಗೆ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರ ವಹಿಸಬೇಕು. ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ, ಉಳಿತಾಯ, ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಗೆ ಸರ್ಕಾರದ ಯೋಜನೆಗಳು ನೆರವಾಗುತ್ತಿದ್ದು, ಇವು ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಿವೆ ಎಂದರು.
ತಾಲೂಕು ಪಂಚಾಯಿತಿ ಸಂಜೀವಿನಿ ಯೋಜನೆಯ ವಲಯ ಮೇಲ್ವಿಚಾರಕ ಎಸ್.ಬಿ. ಸತ್ಯಣ್ಣವರ ಮಾತನಾಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ–ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ವತಿಯಿಂದ ಜೀವನೋಪಾಯ ಸೇವಾ ಕೇಂದ್ರ ಆರಂಭಿಸಲಾಗಿದೆ. ಗ್ರಾಮೀಣ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ, ಉದ್ಯಮಶೀಲತೆ ಹಾಗೂ ವಿವಿಧ ಜೀವನೋಪಾಯ ಚಟುವಟಿಕೆಗಳಿಗೆ ಅಗತ್ಯ ಸಲಹೆ ಮತ್ತು ಅವಕಾಶಗಳನ್ನು ಕೇಂದ್ರದ ಮೂಲಕ ಒದಗಿಸಲಾಗುವುದು ಎಂದರು.
ಸಂಜೀವಿನಿ ಯೋಜನೆ ಈಗಾಗಲೇ ಮಹಿಳೆಯರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಜೀವನೋಪಾಯ ಸೇವಾ ಕೇಂದ್ರದ ಸದುಪಯೋಗ ಪಡೆದು ಮಹಿಳೆಯರು ಮತ್ತಷ್ಟು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯದ ಚೆಕ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಯುವ ವೃತ್ತಿಪರರಾದ ಸಹನಾ ಕೋಟೆಕಲ್ಲ, ಒಕ್ಕೂಟದ ಪದಾಧಿಕಾರಿಗಳಾದ ಸುಬದ್ರಾ ಪದಡಣ್ಣೆವರ, ಹೇಮಾ ರೊಳ್ಳಿ, ಅನ್ನಪೂರ್ಣ ಬಂಡಿವಡ್ಡರ, ಜಯಶ್ರೀ ಕುಂಬಾರ, ಲಕ್ಷ್ಮೀ ಬಟ್ಟೂರು, ಸಾವಿತ್ರಿ ಹೆರಕಲ್ಲ, ಅಕ್ಕಮ್ಮ ಬಿನ್ನಾಳ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



