ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಕ್ಕಳಿಗೆ ಹಾಲು ಕುಡಿಸುವುದರಿಂದ ದೈಹಿಕ ಬೆಳವಣಿಗೆ ಹಾಗೂ ಆರೋಗ್ಯ ಉತ್ತಮವಾಗಲು ಸಹಕಾರಿಯಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ಹೇಳಿದರು.
ರೋಣ ತಾಲೂಕು ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಬಸವ ಪಂಚಮಿ ಅಂಗವಾಗಿ ಪಟ್ಟಣದ ಆಶ್ರಯ ಕಾಲೊನಿ ಮಕ್ಕಳಿಗೆ ಹಾಲು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯರಲ್ಲಿ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು. ಜಗತ್ತಿಗೆ ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆ ಹಾಗೂ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾಲೊನಿಯ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.
ನಾವು ಎಲ್ಲೇ ವಾಸಿಸುತ್ತಿದ್ದರೂ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಬಹುದು. ಎಲ್ಲರನ್ನೂ ಸಮಾನವಾಗಿ ಕಾಣುವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೆಲಸ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಸಂಜೀವಕುಮಾರ ಕುಲಕರ್ಣಿ ಮಾತನಾಡಿ, ನಾವು ಮಾಡುವ ಕಾಯಕದಲ್ಲಿ ಪ್ರಾಮಾಣಿಕತೆ ಇರಬೇಕು. ಅತಿಯಾದ ಮೂಢನಂಬಿಕೆಗೆ ಒಳಗಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ನಂಬಿಕೆಯೊಂದಿಗೆ ಪರಿಶ್ರಮದಿಂದ ಕೆಲಸ ಮಾಡಬೇಕು. ಜಾತಿ, ಮತ, ಪಂಥ, ಧರ್ಮದ ಭೇದವಿಲ್ಲದೆ ಎಲ್ಲರನ್ನೂ ಒಂದೆಡೆ ಸೇರಿಸುವ ಕೆಲಸವನ್ನು ಮಾನವ ಬಂಧುತ್ವ ವೇದಿಕೆ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಗವಿಸಿದ್ದೇಶ್ವರ ಶಾಸ್ತ್ರಿಗಳು, ಯಲ್ಲಪ್ಪ ಮಣ್ಣೊಡ್ಡರ, ಅಬ್ದುಲ್ ಖಾದರ್ ಹುಡೇದ, ಹುಚ್ಚೀರಪ್ಪ ಈಟಿ ಸೇರಿದಂತೆ ಸಮಾಜದ ಹಿರಿಯರು, ತಾಯಂದಿರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ರೋಣ ತಾಲೂಕು ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ಶಿವಾನಂದ ಗೋಗೇರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



