ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಕಳಸಾಪುರ ಹಾಗೂ ನಾಗಾವಿ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಮೊರಂ ಲೂಟಿಯನ್ನು ತಕ್ಷಣ ತಡೆಗಟ್ಟುವಂತೆ ಆಗ್ರಹಿಸಿ ಜೈ ಭೀಮ್ ರಾಜ್ಯ ಸಂಘರ್ಷ ಸಮಿತಿ ವತಿಯಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳಿಗೆ ಮನವಿ ಸಲ್ಲಿಸಲಾಯಿತು.
ಕಳಸಾಪುರ–ನಾಗಾವಿ ಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ನೈಸರ್ಗಿಕ ಸಂಪತ್ತು ನಾಶವಾಗುವುದರ ಜತೆಗೆ ವನ್ಯಜೀವಿಗಳ ಆವಾಸಸ್ಥಾನಕ್ಕೂ ಧಕ್ಕೆಯಾಗುತ್ತಿದೆ. ಹಗಲು-ರಾತ್ರಿ ಭಾರಿ ವಾಹನಗಳು ಅತಿವೇಗ ಹಾಗೂ ಕರ್ಕಶ ಶಬ್ದದೊಂದಿಗೆ ಸಂಚರಿಸುತ್ತಿರುವುದರಿಂದ ಧೂಳಿನ ಮಾಲಿನ್ಯ ಉಂಟಾಗಿ ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಸಮಿತಿ ಆರೋಪಿಸಿದೆ.
ಅಕ್ರಮ ಗಣಿಗಾರಿಕೆ ಕುರಿತು ಮಾಹಿತಿ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೆಲ ಅಧಿಕಾರಿಗಳು ಹಾಗೂ ಹೊರಗುತ್ತಿಗೆ ಸಿಬ್ಬಂದಿ ದಂಧೆಕೋರರೊಂದಿಗೆ ಶಾಮೀಲಾಗಿರುವ ಶಂಕೆಯಿದ್ದು, ಅಕ್ರಮವಾಗಿ ಸಂಚರಿಸುವ ವಾಹನಗಳಿಗೆ ನಾಮಕಾವಸ್ಥೆ ದಂಡ ವಿಧಿಸಿ ಬಿಡಲಾಗುತ್ತಿದೆ ಎಂದು ಸಮಿತಿ ದೂರಿದೆ.
ಕಳಸಾಪುರ–ನಾಗಾವಿ ಸುತ್ತಮುತ್ತಲಿನ ಅಕ್ರಮ ಗಣಿಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಕರ್ತವ್ಯಲೋಪ ಎಸಗಿದ ಹಾಗೂ ಅಕ್ರಮಕ್ಕೆ ಸಾಥ್ ನೀಡಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆಗೆ ಬಳಸುತ್ತಿರುವ ಜೆಸಿಬಿ, ಹಿಟಾಚಿ ಹಾಗೂ ಟಿಪ್ಪರ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅಕ್ರಮದಲ್ಲಿ ತೊಡಗಿರುವ ವ್ಯಕ್ತಿಗಳು, ಜಮೀನು ಹಾಗೂ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಮಂಜುನಾಥ ಎಫ್. ತೌಜಲ್, ರೋಣ ತಾಲೂಕು ಅಧ್ಯಕ್ಷ ಬಸವರಾಜ ಬದಾಮಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಾಷ್ಟ್ರಿನ್ ಜೋಸೆಫ್, ರಾಜೇಶ ವಿ. ಶೆಟ್ಟರ್, ಇಮಾಮಹುಸೇನ್ ಕುನ್ನಿಬಾವಿ, ಸಮೀರಅಹ್ಮದ್ ಕುನ್ನಿಬಾವಿ, ಬಾಬು ಬಳ್ಳಾರಿ, ಮಂಜುನಾಥ ಸಂದಿಮನಿ, ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ಹೇಮಂತ ಹುಬ್ಬಳ್ಳಿ, ವಿರುಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ ಹಾಗೂ ಮಲ್ಲೇಶ ಮೇಳದಾಳಮಠ ಉಪಸ್ಥಿತರಿದ್ದರು.
“ಅಕ್ರಮ ಗಣಿಗಾರಿಕೆಗೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದು.”
— ಗಣೇಶ್ ಹುಬ್ಬಳ್ಳಿ, ಜೈ ಭೀಮ್ ರಾಜ್ಯ ಸಂಘರ್ಷ ಸಮಿತಿ ಅಧ್ಯಕ್ಷ

