ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ 19 ವರ್ಷದ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಯುವತಿಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು, ಪೋಷಕರು ತನಿಖೆಗೆ ಒತ್ತಾಯಿಸಿದ್ದಾರೆ.
ಮೃತ ಯುವತಿಯನ್ನು ಸಾಕಮ್ಮ–ಮಂಜಶೆಟ್ಟಿ ದಂಪತಿಯ ಪುತ್ರಿ ರಚಿತಾ (19) ಎಂದು ಗುರುತಿಸಲಾಗಿದೆ. ರಚಿತಾ ಪ್ರಥಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆಗಸ್ಟ್ 21ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.
ರಚಿತಾ ಸುಮಾರು ಒಂದೂವರೆ ವರ್ಷದಿಂದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನವೀನ್ ಚನ್ನರಾಯಪಟ್ಟಣ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು.
ರಚಿತಾ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿರುವ ವಿಚಾರವನ್ನು ಇಬ್ಬರೂ ಸಾಕಮ್ಮ ಅವರ ಬಳಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಗಳ ವಿವಾಹವನ್ನು ನವೀನ್ ಜೊತೆ ಮಾಡಿಸುವುದಾಗಿ ಸಾಕಮ್ಮ ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ನವೀನ್ ತನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ರಚಿತಾ ತಾಯಿ ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಮಗಳ ಸಾವಿನ ಬಗ್ಗೆ ಅನುಮಾನವಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಘಟನೆ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಯುವತಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



