ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ವಾರ್ಡ್ಗಳಿಗೆ ಅನುದಾನ ಹಂಚಿಕೆ ಮಾಡುವಲ್ಲಿ ಶಾಸಕ ಎಚ್.ಕೆ.ಪಾಟೀಲರು ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಗದಗ-ಬೆಟಗೇರಿ ಅವಳಿ ನಗರದ 35 ವಾರ್ಡ್ಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ವಾರ್ಡ್ಗಳಿಗೆ ಹೆಚ್ಚಿನ ಹಾಗೂ ಬಿಜೆಪಿ ಸದಸ್ಯರಿರುವ ವಾರ್ಡ್ಗಳಿಗೆ ಕಡಿಮೆ ಅನುದಾನ ನೀಡಲಾಗುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸದಸ್ಯರಿರುವ ವಾರ್ಡ್ಗಳಿಗೆ ತಲಾ ₹1 ಕೋಟಿ ಹಾಗೂ ಬಿಜೆಪಿ ಸದಸ್ಯರಿರುವ ವಾರ್ಡ್ಗಳಿಗೆ ₹50 ಲಕ್ಷದಷ್ಟು ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ. ಇದರಿಂದ ಬಿಜೆಪಿ ಸದಸ್ಯರ ವಾರ್ಡ್ಗಳ ಮತದಾರರ ಆಶಯಗಳಿಗೆ ಅನ್ಯಾಯವಾಗುತ್ತಿದೆ. ಜನಪ್ರತಿನಿಧಿಗಳು ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ಕ್ಷೇತ್ರದ ಎಲ್ಲ ವಾರ್ಡ್ಗಳ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡದೆ ಎಲ್ಲ ವಾರ್ಡ್ಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗಿತ್ತು. ಆದರೆ ಪ್ರಸ್ತುತ ಶಾಸಕರು ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ಹಲವು ವಾರ್ಡ್ಗಳಿಗೆ ವಿವಿಧ ಇಲಾಖೆಗಳ ಮೂಲಕ ಅನುದಾನ ಒದಗಿಸಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಬಿಜೆಪಿ ಸದಸ್ಯರಿರುವ ವಾರ್ಡ್ಗಳಿಗೆ ಅಗತ್ಯ ಅನುದಾನ ನೀಡದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಲ್ಲಿಯೂ ವಾರ್ಡ್ವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವುದು ಖಂಡನೀಯ. ಈ ಧೋರಣೆಯನ್ನು ಗದಗ-ಬೆಟಗೇರಿ ಅವಳಿ ನಗರದ ಜನತೆ ಗಮನಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಜು ಕುರುಡಗಿ ಎಚ್ಚರಿಸಿದರು.



