HomeKarnataka Newsಚಾಮರಾಜನಗರ ಶೂಟೌಟ್ ಪ್ರಕರಣ: ಮೂವರ ಸಾವಿನ ತನಿಖೆ CIDಗೆ ವರ್ಗಾವಣೆ!

ಚಾಮರಾಜನಗರ ಶೂಟೌಟ್ ಪ್ರಕರಣ: ಮೂವರ ಸಾವಿನ ತನಿಖೆ CIDಗೆ ವರ್ಗಾವಣೆ!

For Dai;y Updates Join Our whatsapp Group

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರ ಆದೇಶದ ಮೇರೆಗೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸಲಾಗಿದೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಮುಂದಿನ ತನಿಖೆಯನ್ನು ಸಿಐಡಿಯ ವಿಶೇಷ ಘಟಕ ನಡೆಸಲಿದೆ.

ಈ ಸಂಬಂಧ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸಿಐಡಿಯ ವಿಶೇಷ ಘಟಕದಿಂದ ಪ್ರಕರಣದ ತನಿಖೆ ಮುಂದುವರಿಸುವಂತೆ ಆದೇಶಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಇದೀಗ ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಗುಂಡಿನ ದಾಳಿ ನಡೆದ ಸಂದರ್ಭ, ಫೈರಿಂಗ್‌ಗೆ ಕಾರಣ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಮೃತಪಟ್ಟವರ ನಡುವೆ ನಡೆದ ಸಂಘರ್ಷ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ಸಿಐಡಿ ತನಿಖೆ ನಡೆಸುವ ಸಾಧ್ಯತೆಯಿದೆ.

ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆ

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 14ರಂದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್‌ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು.

ಮೂವರು ಅರಣ್ಯ ಪ್ರದೇಶಕ್ಕೆ ನುಗ್ಗಿ ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವನ್ನು ಅರಣ್ಯ ಇಲಾಖೆ ಮಾಡಿತ್ತು. ಇದೇ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಅವರ ನಡುವೆ ಸಂಘರ್ಷ ನಡೆದಿದ್ದು, ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

ಆದರೆ, ಘಟನೆ ಬಳಿಕ ಪ್ರಕರಣ ದೇಶಾದ್ಯಂತ ಗಮನ ಸೆಳೆದಿತ್ತು. ಮೃತರು ಕಳ್ಳಬೇಟೆಗೆ ಬಂದಿದ್ದರು ಎಂಬುದಕ್ಕೆ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯಗಳ ಬಗ್ಗೆಯೂ ವಿವಿಧ ಅನುಮಾನಗಳು ವ್ಯಕ್ತವಾಗಿದ್ದವು. ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದ್ದು, ಸರ್ಕಾರ ವಿಪಕ್ಷಗಳ ತೀವ್ರ ವಿರೋಧ ಎದುರಿಸಬೇಕಾಯಿತು.

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೂಡ ಘಟನೆಯನ್ನು ಖಂಡಿಸಿದ್ದರು ಎನ್ನಲಾಗಿದ್ದು, ಪ್ರಕರಣದ ಕುರಿತು ವ್ಯಾಪಕ ಚರ್ಚೆ ನಡೆದಿತ್ತು. ಇದೀಗ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದರಿಂದ ಶೂಟೌಟ್‌ನ ಸಂಪೂರ್ಣ ಹಿನ್ನೆಲೆ, ಗುಂಡಿನ ದಾಳಿಗೆ ಕಾರಣ ಹಾಗೂ ಘಟನೆಯ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳ ಕುರಿತು ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆ ಮೂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img