HomeUncategorizedಬರದ ನಡುವೆ ಗ್ರಾಮೀಣರಿಗೆ ಉದ್ಯೋಗದ ಆಸರೆ

ಬರದ ನಡುವೆ ಗ್ರಾಮೀಣರಿಗೆ ಉದ್ಯೋಗದ ಆಸರೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಜಿಲ್ಲೆಯಾದ್ಯಂತ ‘ಜಾಬ್ ಕಾರ್ಡ್ ಮೇಳ’ ಹಾಗೂ ‘ವಿಬಿ ಜಿರಾಮ್ ಜಿ’ ಯೋಜನೆಯ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆಯುಕ್ತಾಲಯದ ನಿರ್ದೇಶನದಂತೆ ಆ.15ರಿಂದ ಸೆ.15ರವರೆಗೆ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದ್ದು, ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವ ಮೂಲಕ ವಲಸೆ ತಡೆಗಟ್ಟುವ ಉದ್ದೇಶ ಹೊಂದಲಾಗಿದೆ. ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಲು ಗ್ರಾಮಗಳಲ್ಲಿ ಜಾಗೃತಿ ವಾಹನಗಳ ಮೂಲಕವೂ ಅರಿವು ಮೂಡಿಸಲಾಗುತ್ತಿದೆ.

ಜಿಲ್ಲೆಯು ಮೂಲತಃ ಮಳೆಯಾಶ್ರಿತ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಹೀಗಾಗಿ ಕೃಷಿಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ಸ್ಥಳೀಯವಾಗಿ ಕೂಲಿ ಕೆಲಸ ಒದಗಿಸುವುದು ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದೆ.

‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಯೋಜನೆಯಡಿ ಅರ್ಹ ಕೂಲಿಕಾರರಿಗೆ ವರ್ಷದಲ್ಲಿ 125 ದಿನಗಳವರೆಗೆ ಕೂಲಿ ಕೆಲಸ ಒದಗಿಸುವ ಉದ್ದೇಶವಿದೆ. ಜಾಬ್ ಕಾರ್ಡ್ ಹೊಂದಿರುವ ಹಾಗೂ ಇ-ಕೆವೈಸಿ ಪೂರ್ಣಗೊಳಿಸಿರುವ ಅರ್ಹ ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

100% ಇ-ಕೆವೈಸಿಗೆ ಗುರಿ

2026ರ ಜುಲೈ 1ರಿಂದ ಜಾರಿಯಲ್ಲಿರುವ ಯೋಜನೆಯಡಿ ಈಗಾಗಲೇ ನೋಂದಾಯಿಸಿಕೊಂಡು ಇ-ಕೆವೈಸಿ ಪೂರ್ಣಗೊಳಿಸಿರುವ ಸಕ್ರಿಯ ಕುಟುಂಬಗಳ ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ. ಇ-ಕೆವೈಸಿ ಪೂರ್ಣಗೊಳಿಸದ ಕುಟುಂಬಗಳನ್ನು ಗುರುತಿಸಿ, ಶೇ.100ರಷ್ಟು ಇ-ಕೆವೈಸಿ ಪೂರ್ಣಗೊಳಿಸುವುದು ಜಾಬ್ ಕಾರ್ಡ್ ಮೇಳದ ಪ್ರಮುಖ ಉದ್ದೇಶವಾಗಿದೆ. ಈ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ.

ಮೇಳವು ಕೇವಲ ಹೊಸ ಕುಟುಂಬಗಳಿಗೆ ಉದ್ಯೋಗ ಚೀಟಿ ವಿತರಣೆ ಅಥವಾ ನೋಂದಣಿಗೆ ಸೀಮಿತವಾಗಿಲ್ಲ. ಸ್ಥಳೀಯವಾಗಿ ಕೆಲಸದ ಅವಶ್ಯಕತೆ ಇರುವ ಅಕುಶಲ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಸಿ, ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ಗುರಿಯನ್ನೂ ಹೊಂದಿದೆ.

ಜಿಲ್ಲೆಯಾದ್ಯಂತ ಆಂದೋಲನೋಪಾದಿಯಲ್ಲಿ ನಡೆಯುತ್ತಿರುವ ‘ಜಾಬ್ ಕಾರ್ಡ್ ಮೇಳ’ದಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಯೋಜನೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರ್ಹ ಕುಟುಂಬಗಳು ವರ್ಷದಲ್ಲಿ 125 ದಿನಗಳ ಕೂಲಿ ಕೆಲಸ ಪಡೆದು, ದಿನಕ್ಕೆ ₹382ರಂತೆ ಒಟ್ಟು ₹47,750ರವರೆಗೆ ಕೂಲಿ ಪಡೆಯಲು ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮನವಿ ಮಾಡಿದೆ.

ಮುಂಗಾರು ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಕಡಿಮೆಯಾಗಿರುವ ಸಂದರ್ಭದಲ್ಲಿ ಗ್ರಾಮದಲ್ಲಿಯೇ ಉದ್ಯೋಗ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಜಾಬ್ ಕಾರ್ಡ್ ಹೊಂದಿ ಇ-ಕೆವೈಸಿ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಕೂಲಿಕಾರನಿಗೂ ಯೋಜನೆಯ ಪ್ರಯೋಜನ ದೊರೆಯುವಂತೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲು ಗಮನಹರಿಸಲಾಗುತ್ತಿದೆ.

— ಸಿ.ಆರ್. ಮುಂಡರಗಿ, ಉಪ ಕಾರ್ಯದರ್ಶಿ, ಜಿಪಂ, ಗದಗ

ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಕೆಲಸದ ಅವಕಾಶಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾಬ್ ಕಾರ್ಡ್ ಮೇಳ ಮಹತ್ವ ಪಡೆದಿದೆ. ಗ್ರಾಮದಲ್ಲಿಯೇ ಕೂಲಿ ಕೆಲಸ ದೊರೆಯುವುದರಿಂದ ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು. ನೋಂದಾಯಿತ ಕುಟುಂಬಗಳು ಇ-ಕೆವೈಸಿ ಪೂರ್ಣಗೊಳಿಸಿ ಉದ್ಯೋಗಾವಕಾಶ ಪಡೆದುಕೊಳ್ಳಬೇಕು.

— ಸಿ.ಎನ್. ಶ್ರೀಧರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಪಂ, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img