ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿದ್ಯಾರ್ಥಿ ಜೀವನ ಹಾಗೂ ಪದವಿ ಶಿಕ್ಷಣದ ಅವಧಿ ವ್ಯಕ್ತಿಯ ಭವಿಷ್ಯ ರೂಪಿಸುವ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಂಡು ಸತತ ಪರಿಶ್ರಮ ಹಾಗೂ ಏಕಾಗ್ರತೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಎಲ್.ಎಲ್. ಗುಳೇದಗುಡ್ಡ ಹೇಳಿದರು.
ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಆಶ್ರಯದಲ್ಲಿ ಆಯೋಜಿಸಿದ್ದ ವಿವಿಧ ವಿಷಯಗಳ ಸರಣಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜಿನಲ್ಲಿ ಆಯೋಜಿಸುವ ಕಾರ್ಯಾಗಾರಗಳು ವಿದ್ಯಾರ್ಥಿಗಳನ್ನು ಕೇವಲ ಪದವೀಧರರನ್ನಾಗಿ ಮಾಡುವುದಷ್ಟೇ ಅಲ್ಲದೆ, ಉದ್ಯೋಗಾರ್ಹ ಹಾಗೂ ಸಾಮಾಜಿಕ ಜವಾಬ್ದಾರಿಯುತ ವ್ಯಕ್ತಿಗಳನ್ನಾಗಿ ರೂಪಿಸಲು ಸಹಕಾರಿಯಾಗುತ್ತವೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳು ಪಠ್ಯಕ್ರಮಕ್ಕೆ ಸೀಮಿತವಾಗದೆ, ಪ್ರಸ್ತುತ ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕಂತೆ ಗುಣಮಟ್ಟದ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿವೆ ಎಂದರು.
ತಜ್ಞರ ಮಾರ್ಗದರ್ಶನದಲ್ಲಿ ವಿಷಯವಾರು ಮಾಹಿತಿಯನ್ನು ಪರಿಣಾಮಕಾರಿಯಾಗಿ ಕಲಿಯಲು ಕಾರ್ಯಾಗಾರಗಳು ನೆರವಾಗುತ್ತವೆ. ತಂತ್ರಜ್ಞಾನ, ಕಲೆ, ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ನಡೆಯುವ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿನ ಕೌಶಲ್ಯದ ಕೊರತೆ ನೀಗಿಸುವುದರ ಜತೆಗೆ ಹೊಸ ವಿಚಾರಗಳನ್ನು ಪ್ರಯೋಗಿಸುವ ಧೈರ್ಯ ಹಾಗೂ ಉದ್ಯೋಗ ಸಂದರ್ಶನಗಳನ್ನು ಎದುರಿಸುವ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಕಸ್ತೂರೆವ್ವ ದಳವಾಯಿ ಮಾತನಾಡಿ, ಕೇವಲ ಪಠ್ಯಪುಸ್ತಕದ ಜ್ಞಾನ ಹಾಗೂ ಅಂಕಪಟ್ಟಿಗಳು ವಿದ್ಯಾರ್ಥಿಯ ಭವಿಷ್ಯ ನಿರ್ಧರಿಸಲು ಸಾಧ್ಯವಿಲ್ಲ. ತರಗತಿಯ ನಾಲ್ಕು ಗೋಡೆಗಳಾಚೆಗಿನ ಪ್ರಾಯೋಗಿಕ ಜ್ಞಾನ ಹಾಗೂ ಉದ್ಯಮ ರಂಗದ ವಾಸ್ತವ ಅಗತ್ಯತೆಗಳನ್ನು ಅರಿಯುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ನಿಯಮಿತವಾಗಿ ಆಯೋಜಿಸುವ ಕಾರ್ಯಾಗಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಬದುಕಿಗೆ ಭದ್ರ ಬುನಾದಿ ಹಾಕುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಐಕ್ಯೂಎಸಿ ಸಂಚಾಲಕಿ ಜಯಶ್ರೀ ಮುತಗಾರ ಮಾತನಾಡಿ, ಪದವಿ ಹಂತದ ದಿನಗಳು ಯುವಜನರ ಬದುಕಿನ ಗತಿಯನ್ನು ನಿರ್ಧರಿಸುತ್ತವೆ. ಸಾಮಾಜಿಕ ಜಾಲತಾಣ ಹಾಗೂ ಅನಗತ್ಯ ಚಟುವಟಿಕೆಗಳಿಗೆ ಸಮಯ ವ್ಯರ್ಥ ಮಾಡದೆ, ದಿನನಿತ್ಯದ ಓದಿಗೆ ನಿಗದಿತ ಸಮಯ ಮೀಸಲಿಡುವ ಶಿಸ್ತು ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ದೊರೆಯುವ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಿ ಹೆತ್ತವರಿಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಕಾರ್ಯಾಗಾರದಲ್ಲಿ ಕನ್ನಡ ವಿಷಯದ ಕುರಿತು ಶಿವಮೂರ್ತಪ್ಪ ಕುರೇರ, ಇಂಗ್ಲಿಷ್ ಕುರಿತು ನಸರೀನಾಬಾನು ಜಮಾದರ, ಭೀಮಸೇನಾ ಉಗ್ರದ, ಗಣಿತದ ಕುರಿತು ಬಸವರಾಜ ಬಳಗಾನೂರ, ವಾಣಿಜ್ಯದ ಕುರಿತು ಮಹಾಂತೇಶ ಮುಧೋಳ, ಇತಿಹಾಸದ ಕುರಿತು ಮಾರುತಿ ಹಾಗೂ ಅರ್ಥಶಾಸ್ತ್ರದ ಕುರಿತು ರಾಜು ಬಿ.ಕೆ. ವಿಶೇಷ ಉಪನ್ಯಾಸ ನೀಡಿದರು.
ಈ ವೇಳೆ ಪ್ರಾಧ್ಯಾಪಕರಾದ ಎಸ್.ಎಸ್. ಸೂಡಿ, ಸುನಂದಾ ಮುಂಜಿ, ಅನಿಲಕುಮಾರ, ಶಿವಪ್ಪ ಕುರಬರ, ವಿರೂಪಾಕ್ಷ ಆರ್., ಅಯ್ಯಪ್ಪ, ಎನ್.ಎಸ್. ಹೊನ್ನೂರ, ವಿ.ಸಿ. ಇಲ್ಲೂರ, ಪಿ.ವೈ. ಶಾಸ್ತ್ರಿ, ಕೆ.ಎನ್. ಕಟ್ಟಿಮನಿ, ವಿವೇಕಾನಂದ ಹಿರೇಮಠ, ಶರಣಪ್ಪ ಚಿಕ್ಕೆನಕೊಪ್ಪ, ಶಂಕರಗೌಡ ಪಾಟೀಲ, ಎಂ.ಎಫ್. ತಹಶೀಲ್ದಾರ, ಎಸ್.ಆರ್. ನದಾಫ್ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿ ಜೀವನ ಹಾಗೂ ಪದವಿ ಶಿಕ್ಷಣದ ಅವಧಿ ಭವಿಷ್ಯ ರೂಪಿಸುವ ಅಮೂಲ್ಯ ಕಾಲ. ಈ ಸಮಯವನ್ನು ಸದುಪಯೋಗಪಡಿಸಿಕೊಂಡು ಶಿಸ್ತು, ಏಕಾಗ್ರತೆ ಹಾಗೂ ಕಠಿಣ ಪರಿಶ್ರಮದಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಉನ್ನತ ಸಾಧನೆ ಸಾಧ್ಯ.
— ನಿವೃತ್ತ ಪ್ರಾಂಶುಪಾಲ ಎಲ್.ಎಲ್. ಗುಳೇದಗುಡ್ಡ



