ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬಹುನಿರೀಕ್ಷಿತ ಗದಗ–ಯಲವಿಗಿ ರೈಲು ಮಾರ್ಗ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ ಕಾಮಗಾರಿಗೆ ವೇಗ ನೀಡಬೇಕು ಎಂದು ಗದಗ–ಶಿರಹಟ್ಟಿ–ಯಲವಿಗಿ ರೈಲ್ವೆ ಮಾರ್ಗ ಹೋರಾಟ ಸಮಿತಿ ವತಿಯಿಂದ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಈರಣ್ಣ ಕೋಟಿ ಹಾಗೂ ಉಪಾಧ್ಯಕ್ಷ ರಾಯೇಸಾಬ ಢಾಲಾಯತ ಮಾತನಾಡಿ, ೨೦೨೧–೨೨ನೇ ಸಾಲಿನ ಬಜೆಟ್ನಲ್ಲಿ ಗದಗ–ಯಲವಿಗಿ ರೈಲು ಮಾರ್ಗ ಯೋಜನೆ ಘೋಷಣೆಯಾಗಿತ್ತು. ಆದರೆ, ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆ ನಿರೀಕ್ಷಿತ ವೇಗದಲ್ಲಿ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು.
ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ರೈಲು ಮಾರ್ಗದ ಕಾಮಗಾರಿ ಆರಂಭಕ್ಕೂ ಹಿನ್ನಡೆಯಾಗುವ ಆತಂಕವಿದೆ. ಹೀಗಾಗಿ ಯೋಜನೆಯ ಮಹತ್ವವನ್ನು ಪರಿಗಣಿಸಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಅನುಭವ ಹಾಗೂ ಮಾರ್ಗದರ್ಶನದ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ವಿಧಾನಸಭಾಧ್ಯಕ್ಷರು, ತಮ್ಮ ಅವಧಿಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ವಿಶೇಷ ಗಮನ ಹರಿಸಬೇಕು ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ವಿನಂತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಹುಮಾಯೂನ್ ಮಾಗಡಿ, ಸಿ.ಸಿ. ನೂರಶೆಟ್ಟರ, ಡಾ. ಸುನೀಲ ಬುರಬುರೆ, ಅತ್ತಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



