ಬೆಂಗಳೂರು: ಬಿಟ್ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್, ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರ ನಿವಾಸಗಳ ಮೇಲೂ ಇ.ಡಿ ದಾಳಿ ನಡೆಸಿತ್ತು.
ತನಿಖೆ ಪೂರ್ಣಗೊಳಿಸಿದ ಬಳಿಕ ಮೊಹಮ್ಮದ್ ನಲಪಾಡ್ ಸೇರಿದಂತೆ ಆರೋಪಿಗಳ ವಿರುದ್ಧ ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಸಲ್ಲಿಕೆಯ ಕೆಲ ದಿನಗಳ ಬಳಿಕ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಕೋರಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿಗಳಿಗೆ ಇ.ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಮಧು ಆರ್. ರಾವ್ ಆಕ್ಷೇಪಣೆ ಸಲ್ಲಿಸಿ, ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಇ.ಡಿ ವಿಶೇಷ ನ್ಯಾಯಾಲಯ, ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.



