ವಿಜಯಸಾಕ್ಷಿ ಸುದ್ದಿ, ಗದಗ: ತೀವ್ರ ಬರಗಾಲದಿಂದ ಗದಗ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರೂ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಸೆಪ್ಟೆಂಬರ್ 1ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಸಿದರು.
ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಬರ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಜಾನುವಾರುಗಳು ಸಂಕಷ್ಟಕ್ಕೀಡಾಗಿದ್ದು, ಬೆಳೆ ಹಾನಿಯಿಂದ ರೈತರು ಆತಂಕದಲ್ಲಿದ್ದಾರೆ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಒಂದು ವಾರದೊಳಗೆ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದ ಅವರು, ರೈತರ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಬೇಕು ಎಂದರು.
ರೈತರ ಪರವಾಗಿ ನಿಲ್ಲದ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಗಿರೀಶ್ ಹೊಸಮನಿ, ನಾಗರಾಜ ಕಳ್ಳಿಹಾಳ, ರಾಮಣ್ಣ ಕಮ್ಮಾರ, ಬಸವರಾಜ ಮರಾಠೆ, ಶರಣಪ್ಪ ಕಮ್ಮಾರ, ರವಿ ವಗ್ಗನವರ್ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.
ತೀವ್ರ ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವುದು ಖಂಡನೀಯ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಮುಖ್ಯಮಂತ್ರಿ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.
ಶಂಕರಗೌಡ ಜಾಯನಗೌಡ್ರ, ಅಧ್ಯಕ್ಷರು, ರೈತ ಸಂಘ



