HomeGadag Newsಜಿಲ್ಲಾ ಕ್ರೀಡಾಂಗಣದಲ್ಲಿ ಟರ್ಫ್ ಬೇಡ: ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸಿ

ಜಿಲ್ಲಾ ಕ್ರೀಡಾಂಗಣದಲ್ಲಿ ಟರ್ಫ್ ಬೇಡ: ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸಿ

For Dai;y Updates Join Our whatsapp Group

ಗದಗ: ಗದಗ-ಬೆಟಗೇರಿ ಅವಳಿ ನಗರದ ಏಕೈಕ ಜಿಲ್ಲಾ ಕ್ರೀಡಾಂಗಣದಲ್ಲಿ ತರಾತುರಿಯಲ್ಲಿ ಸಿಂಥೆಟಿಕ್ ಫುಟ್‌ಬಾಲ್ ಟರ್ಫ್ ಮೈದಾನ ನಿರ್ಮಿಸುತ್ತಿರುವ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಅದರ ಬದಲಿಗೆ ಹುಲ್ಲಿನ ಹಾಸಿನ (ಗ್ರಾಸ್) ಫುಟ್‌ಬಾಲ್ ಮೈದಾನ ನಿರ್ಮಿಸಬೇಕು ಎಂದು ಶಿವರಾಮಕೃಷ್ಣ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕ್ರೀಡಾ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಮಕೃಷ್ಣ ಸೇವಾ ಟ್ರಸ್ಟ್ ಅಧ್ಯಕ್ಷ ರಾಜೂ ಖಾನಪ್ಪನವರ, ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿವರ್ಷ ದಸರಾ ಕ್ರೀಡಾಕೂಟ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಶಾಲಾ-ಕಾಲೇಜುಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳು ನಡೆಯುತ್ತವೆ. ಅಲ್ಲದೆ, ಆಗಸ್ಟ್ 15, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಮತ್ತು ನಾಡಹಬ್ಬಗಳ ಕಾರ್ಯಕ್ರಮಗಳಿಗೂ ಇದೇ ಕ್ರೀಡಾಂಗಣ ಬಳಕೆಯಾಗುತ್ತಿದೆ ಎಂದು ತಿಳಿಸಿದರು.

ಇಂತಹ ಬಹುಉದ್ದೇಶದ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಫುಟ್‌ಬಾಲ್ ಟರ್ಫ್ ನಿರ್ಮಿಸಿದರೆ ಉಳಿದ ಕ್ರೀಡೆಗಳಿಗೆ ತೀವ್ರ ಅನಾನುಕೂಲವಾಗಲಿದೆ ಎಂದು ಕ್ರೀಡಾಪಟುಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಶಾಟ್‌ಪುಟ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಇದರಿಂದ ಕ್ರೀಡಾಪಟುಗಳು ಶಾಲಾ-ಕಾಲೇಜುಗಳ ಮೈದಾನಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಹೇಳಿದರು.

ಫುಟ್‌ಬಾಲ್ ಕ್ರೀಡೆಯ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಆದರೆ ಒಂದೇ ಕ್ರೀಡೆಗಾಗಿ ಜಿಲ್ಲೆಯ ವಿವಿಧ ಕ್ರೀಡೆಗಳಿಗೆ ಲಭ್ಯವಿರುವ ಏಕೈಕ ಕ್ರೀಡಾಂಗಣದ ಸ್ವರೂಪವನ್ನು ಬದಲಿಸುವುದು ವೈಜ್ಞಾನಿಕ ಕ್ರಮವಲ್ಲ. ಟರ್ಫ್ ಬದಲಿಗೆ ಹುಲ್ಲಿನ ಹಾಸಿನ ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸಿದರೆ ಫುಟ್‌ಬಾಲ್ ಸೇರಿದಂತೆ ಇತರ ಕ್ರೀಡೆಗಳಿಗೂ ಅವಕಾಶ ಉಳಿಯಲಿದೆ ಎಂದು ರಾಜೂ ಖಾನಪ್ಪನವರ ಪ್ರತಿಪಾದಿಸಿದರು.

ಕ್ರೀಡಾಂಗಣ ನಿರ್ಮಾಣದ ಕುರಿತು ವಿವಿಧ ಕ್ರೀಡಾ ಸಂಘಟನೆಗಳು ಹಾಗೂ ಕ್ರೀಡಾಪಟುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ ಆರಂಭಿಸಿರುವುದು ಖಂಡನೀಯ. ಕ್ರೀಡಾ ಕ್ಷೇತ್ರದ ತಜ್ಞರು ಹಾಗೂ ಎಲ್ಲ ಕ್ರೀಡಾ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈಗಾಗಲೇ ಆರಂಭಿಸಿರುವ ಟರ್ಫ್ ಫುಟ್‌ಬಾಲ್ ಮೈದಾನದ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಏಳು ದಿನಗಳೊಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ, ಸರದಿ ಉಪವಾಸ ಸತ್ಯಾಗ್ರಹ, ರಸ್ತೆ ತಡೆ ಹಾಗೂ ಅಮರಣ ಉಪವಾಸ ಸೇರಿದಂತೆ ವಿವಿಧ ರೀತಿಯ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡರ, ಅರವಿಂದ ಹುಲ್ಲೂರ, ರವಿಕಾಂತ ಅಂಗಡಿ, ಪ್ರಭುಗೌಡ ಪಾಟೀಲ, ವೀರೇಶ ರೋಣದ, ನಾಗರಾಜ ಬಂಡಿವಡ್ಡರ, ಮಹಾಂತೇಶ ಪಾಟೀಲ, ರಾಜೂ ಉಮಚಗಿ, ಪರಮೇಶ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img