ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೆಸಿಸಿ ಬ್ಯಾಂಕ್ ಧಾರವಾಡದ ಸಂಯುಕ್ತ ಆಶ್ರಯದಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗಾಗಿ ವಿಶೇಷ ತರಬೇತಿ ಶಿಬಿರ ನಡೆಯಿತು.
ಪಟ್ಟಣದ ನಾಟಕ ಕಲಾಬ್ರಹ್ಮ ಶ್ರೀ ಎಚ್. ವೆಂಕುಬರಾವ ಕಲಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೆಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದಗೌಡ ವಿ. ಪಾಟೀಲ ಉದ್ಘಾಟಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲವರ್ಧನೆಗೊಳಿಸಿ ಬಹುಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಣ ದುರುಪಯೋಗ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಸಿಸಿ ಬ್ಯಾಂಕ್ ನಿರ್ದೇಶಕ ಮಾಳಪ್ಪ ಗು. ನಿಂಗಜ್ಜನವರ ಅವರು, ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಮಾದರಿ ಸಂಘಗಳ ಕಾರ್ಯವೈಖರಿಯಿಂದ ಇತರ ಸಂಸ್ಥೆಗಳು ಪ್ರೇರಣೆ ಪಡೆಯಬೇಕು ಎಂದು ತಿಳಿಸಿದರು.
ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಸಹಾಯಕ ನಿರ್ದೇಶಕಿ ಎಚ್.ಎ. ಬಂಡೆಣ್ಣವರ ಮಾತನಾಡಿ, ಪ್ಯಾಕ್ಸ್ಗಳು ಆರ್ಥಿಕವಾಗಿ ಸಬಲಗೊಂಡು ಲಾಭದಾಯಕವಾಗಿ ಕಾರ್ಯನಿರ್ವಹಿಸಿದರೆ ಸಹಕಾರ ಚಳುವಳಿಗೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಕರ್ತವ್ಯ ಮತ್ತು ಜವಾಬ್ದಾರಿಗಳು, ಸಹಕಾರಿ ಕಾಯ್ದೆಯ ಇತ್ತೀಚಿನ ತಿದ್ದುಪಡಿಗಳು, ಬಹುಸೇವಾ ಕೇಂದ್ರಗಳಾಗಿ ಪ್ಯಾಕ್ಸ್ಗಳ ಪರಿವರ್ತನೆ ಹಾಗೂ ಸಹಕಾರ ಸಂಘಗಳ ಪ್ರಗತಿ ಕುರಿತು ಶಂಕರ ಎಸ್. ಕರಬಸಣ್ಣವರ, ವಿಶ್ವನಾಥ ಎಚ್. ಲಮಾಣಿ ಹಾಗೂ ಜಗದೀಶಗೌಡ ಎಂ. ಪಾಟೀಲ ಉಪನ್ಯಾಸ ನೀಡಿದರು.
ಶಿರಹಟ್ಟಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕೆ.ಸಿ. ಕೂಸನೂರಮಠ, ಕೆಸಿಸಿ ಬ್ಯಾಂಕ್ನ ವಿಶ್ವನಾಥ ಎಚ್. ಲಮಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗದಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರಶೀದಾಬಾನು ಸಿ. ಯಲಿಗಾರ ವಂದಿಸಿದರು.



