ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾರ್ವಜನಿಕ ಆರೋಗ್ಯ ಹಾಗೂ ಯುವಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗುಟ್ಕಾ ಮತ್ತು ತಂಬಾಕು ನಿಷೇಧವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ, ಲಕ್ಷ್ಮೇಶ್ವರ ಮಹಿಳಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ತಂಬಾಕು ಉತ್ಪನ್ನಗಳ ಬಳಕೆಯಿಂದ ಯುವಜನರ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದ್ದು, ಅನೇಕ ಕುಟುಂಬಗಳ ನೆಮ್ಮದಿ ಹಾಳಾಗುತ್ತಿದೆ. ಆದ್ದರಿಂದ ತಂಬಾಕು ಲಾಬಿ ಅಥವಾ ವ್ಯಾಪಾರಿ ಹಿತಾಸಕ್ತಿಗಳ ಒತ್ತಡಕ್ಕೆ ಮಣಿಯದೆ ನಿಷೇಧವನ್ನು ಕಟ್ಟುನಿಟ್ಟಾಗಿ ಮುಂದುವರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮುಂದಿನ ಪೀಳಿಗೆಯ ಆರೋಗ್ಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಗುಟ್ಕಾ ಮತ್ತು ತಂಬಾಕು ನಿಷೇಧವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.
ಈ ವೇಳೆ ಬಳಗದ ಆಡಳಿತ ಮಂಡಳಿಯ ಮುಖ್ಯಸ್ಥರಾದ ಜಯಲಕ್ಷ್ಮೀ ಗಡ್ಡದೇವರಮಠ, ಜಯಲಕ್ಷ್ಮೀ ಮಹಾಂತಶೆಟ್ಟರ, ರಾಜೇಶ್ವರಿ ಪಾಟೀಲ, ರಮೇಶ ನವಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

