ವಿಜಯಸಾಕ್ಷಿ ಸುದ್ದಿ, ಗದಗ: ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಸ ಸಂಗ್ರಹಣೆ ಹಾಗೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರನ್ನು ಪರಿಗಣಿಸದೆ ಹೊಸ ನೇಮಕಾತಿ ಮಾಡಬಾರದು. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನೇ ನೇರ ಪಾವತಿ ಅಡಿಯಲ್ಲಿ ಖಾಯಂಗೊಳಿಸಬೇಕು ಎಂದು ಕೃಷ್ಣ ಪರಾಪುರ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಆಗಸ್ಟ್ 29ರಂದು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 20 ವರ್ಷಗಳಿಂದ ನಗರದಲ್ಲಿ ಮನೆ-ಮನೆಗೆ ತೆರಳಿ ಕಸ ಸಂಗ್ರಹಿಸುವ ಕಾರ್ಮಿಕರ ಸೇವಾವಧಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ನಾಗಮ್ಮ ಬಳ್ಳಾರಿ ಮಾತನಾಡಿ, ಹಲವು ವರ್ಷಗಳಿಂದ ನಗರದ ಸ್ವಚ್ಛತೆಗಾಗಿ ದುಡಿಯುತ್ತಿರುವ ಕಾರ್ಮಿಕರನ್ನು ಕಡೆಗಣಿಸಿ ಹೊಸಬರನ್ನು ನೇಮಕ ಮಾಡಿಕೊಳ್ಳುವುದು ನ್ಯಾಯಸಮ್ಮತವಲ್ಲ ಎಂದರು.
ಬೇಡಿಕೆ ಈಡೇರಿಸದಿದ್ದರೆ ಸೆ. 7ರಿಂದ ನಗರಸಭೆ ಎದುರು ಪ್ರತಿಭಟನೆ ನಡೆಸಿ, ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಕಾರ್ಮಿಕರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಇಂದ್ರವ್ವ ಸಕ್ಕರಿ, ಕನಕವ್ವ ದೊಡ್ಡಮನಿ, ರಾಜೇಶ್ವರಿ, ಯುವರಾಜ ಬಳ್ಳಾರಿ, ಅನಿತಾ ಯಳವತ್ತಿ, ಕಸ್ತೂರಿವ್ವ ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



