HomeDharwadಜನರ ಮನೆಬಾಗಿಲಿಗೆ ಸರ್ಕಾರ; ಅಹವಾಲುಗಳಿಗೆ ತ್ವರಿತ ಪರಿಹಾರ : ಸಂತೋಷ ಲಾಡ್

ಜನರ ಮನೆಬಾಗಿಲಿಗೆ ಸರ್ಕಾರ; ಅಹವಾಲುಗಳಿಗೆ ತ್ವರಿತ ಪರಿಹಾರ : ಸಂತೋಷ ಲಾಡ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನರ ಸಮಸ್ಯೆಗಳನ್ನು ಕಚೇರಿಗಳ ಕಡತಕ್ಕೆ ಸೀಮಿತಗೊಳಿಸದೆ, ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಇಲಾಖೆಯನ್ನು ಸ್ಥಾಪಿಸಿದೆ. ಈ ಮೂಲಕ ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ಕಲ್ಪಿಸಲಿದೆ ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕಲಘಟಗಿಯ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ–ಜನಸಂಪರ್ಕ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಅಹವಾಲುಗಳನ್ನು ಆಲಿಸಿ, ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲೂ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುವುದು ಎಂದರು.

ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಜನರು ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಜನರ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ಲಾಡ್ ಹೇಳಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ಸರ್ಕಾರ ಜನಪರವಾಗಿದ್ದು, ರೈತರು, ಕಾರ್ಮಿಕರು ಹಾಗೂ ಮಹಿಳೆಯರ ಸಮಸ್ಯೆಗಳನ್ನು ಆಲಿಸಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅಧಿಕಾರಿಗಳು ನಿಗದಿತ ಸಮಯದಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರಾಜ್ಯದ ಜನರು ನೀಡಿದ 136 ಸ್ಥಾನಗಳ ಬೆಂಬಲದ ಋಣ ತೀರಿಸುವ ನಿಟ್ಟಿನಲ್ಲಿ ಸರ್ಕಾರ ಜನರ ಮನೆಬಾಗಿಲಿಗೆ ಯೋಜನೆಗಳನ್ನು ತಲುಪಿಸಲಿದೆ. ಈಗಾಗಲೇ 42ಕ್ಕೂ ಅಧಿಕ ಅಹವಾಲುಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು. ರಾಜ್ಯದ 101 ತಾಲೂಕುಗಳು ಹಾಗೂ ಇತ್ತೀಚೆಗೆ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದರು.

ಶಾಸಕ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ತಾಲೂಕು ಹಾಗೂ ಜಿಲ್ಲಾ ಕಚೇರಿಗಳಲ್ಲಿ ದಾಖಲಿಸಿಕೊಂಡು ಶೀಘ್ರ ಪರಿಹರಿಸಬೇಕು. ಅಧಿಕಾರಿಗಳು ಪ್ರಜೆಗಳ ಸೇವೆಗೆ ಬದ್ಧರಾಗಬೇಕು. ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ವಿಶೇಷಚೇತನರಿಗೆ ತ್ರಿಚಕ್ರ ವಾಹನ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ್ ಟಿ.ಎಚ್.ಎಂ., ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಗೌರಿ ನಿರೂಪಿಸಿದರು.

ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮ ವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

— ಸಂತೋಷ ಲಾಡ್, ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img