ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರ್ಕಾರ ‘ಪ್ರಜಾ ಸೇವೆ’ ಎಂಬ ಹೊಸ ನಾಟಕ ಆರಂಭಿಸುವ ಮೂಲಕ ಕನ್ನಡಿಗರನ್ನು ಮಂಕು ಮಾಡಲು ಹೊರಟಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.
ಸುಮಾರು 60 ವರ್ಷಗಳ ಕಾಲ ಅಧಿಕಾರ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಜೆಗಳ ಸೇವೆ ಮಾಡಬೇಕೆಂಬುದು ಈಗ ಅರಿವಾದಂತಿದೆ. ಇಷ್ಟು ವರ್ಷಗಳ ಕಾಲ ರಾಜ್ಯವನ್ನು ಕೊಳ್ಳೆ ಹೊಡೆದಿದ್ದು, ಇದೀಗ ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಹೊಸ ಹೊಸ ಹೆಸರುಗಳನ್ನು ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯುವ ವಿಫಲ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಚುನಾವಣೆ ವೇಳೆ ‘ಪ್ರಜೆಗಳೇ ಪ್ರಭುಗಳು’ ಎಂದು ಹೇಳಿ, ಜನರ ಸೇವೆ ಮಾಡುವುದಾಗಿ ಬಣ್ಣಬಣ್ಣದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷಗಳ ಬಳಿಕ ಪ್ರಜೆಗಳ ಸೇವೆ ಮಾಡಬೇಕೆಂಬುದು ಅರಿವಾಗಿದೆಯೇ? ಅಥವಾ ಲೂಟಿ ಮಾಡಲು ಹೊಸ ಹೆಸರನ್ನು ಬಳಸುತ್ತಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ಕೂಡ ಹತ್ತು ಹಲವು ಹೊಸ ಹೆಸರುಗಳನ್ನು ಇಟ್ಟು ಸರ್ಕಾರದ ಹಣದಲ್ಲಿ ಪ್ರಚಾರ ಪಡೆದಿರುವುದನ್ನು ಯಾರೂ ಮರೆತಿಲ್ಲ. ಇದೀಗ ಮತ್ತೊಂದು ಹೊಸ ಹೆಸರಿನ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.



