ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಡಿಜಿಟಲ್ ಯುಗದ ಭರಾಟೆಯ ನಡುವೆಯೂ ಪೆನ್ನು-ಪೇಪರ್ನೊಂದಿಗೆ ಭಾವನೆಗಳನ್ನು ಅಕ್ಷರ ರೂಪಕ್ಕಿಳಿಸುವ ಕಲೆ ತನ್ನ ಮಹತ್ವವನ್ನು ಕಳೆದುಕೊಂಡಿಲ್ಲ ಎಂಬುದನ್ನು ವಿದ್ಯಾರ್ಥಿನಿ ಶ್ರಾವಣಿ ಕರಿಗಾರ ಅವರ ಸಾಧನೆ ಮತ್ತೊಮ್ಮೆ ಸಾಬೀತುಪಡಿಸಿದೆ.
ಭಾರತೀಯ ಅಂಚೆ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಪತ್ರ ಬರೆಯುವ ಅಭಿಯಾನ 2025-26ರ ‘ನನ್ನ ಆದರ್ಶ ವ್ಯಕ್ತಿಗೊಂದು ಪತ್ರ’ ವಿಷಯದ ಪತ್ರ ಬರೆಯುವ ಸ್ಪರ್ಧೆಯಲ್ಲಿ ಮುಂಡರಗಿಯ ಜಗದ್ಗುರು ತೋಂಟದಾರ್ಯ ವಸತಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರಾವಣಿ ಕರಿಗಾರ ವಲಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕ ಎಸ್.ಎಸ್. ಶಿರಹಟ್ಟಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ, ವಿದ್ಯಾರ್ಥಿಗಳಲ್ಲಿ ಬರವಣಿಗೆಯ ಅಭ್ಯಾಸ, ಸೃಜನಶೀಲತೆ ಹಾಗೂ ಸಂವಹನ ಕೌಶಲ್ಯ ಬೆಳೆಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ವಿವಿಧ ಪತ್ರ ಬರೆಯುವ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೈಬರಹದ ಅಭ್ಯಾಸವನ್ನು ಮುಂದುವರಿಸುವುದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದರು.
ಅಂಚೆ ಇಲಾಖೆಯ ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪರೀಕ್ಷೆ ನಡೆಸಲಾಗುತ್ತಿದ್ದು, ಅರ್ಹತೆ ಪಡೆದವರಿಗೆ ಪ್ರತಿವರ್ಷ ₹6,000 ಪ್ರೋತ್ಸಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಅಂಚೆ ಇಲಾಖೆಯ ವಿವಿಧ ಉಳಿತಾಯ ಹಾಗೂ ಜನೋಪಯೋಗಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂಚೆ ಜೀವ ವಿಮಾ ಅಧಿಕಾರಿ ಎಸ್.ಐ. ನಾಯ್ಕ ಮಾತನಾಡಿ, 18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಗದಗ ನಗರದ ಎ.ಎಸ್.ಎಸ್. ಕಾಮರ್ಸ್ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ವೇತಾ ಸಿ. ಶಿರೂರ ಪ್ರಥಮ ಸ್ಥಾನ ಪಡೆದು ₹25,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದಿರುವುದನ್ನು ತಿಳಿಸಿದರು. ಜಿಲ್ಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಿದ್ದಾರೆ ಎಂದರು.
ಮುಂಡರಗಿ ಅಂಚೆ ಕಚೇರಿಯ ಅಂಚೆ ಪಾಲಕ ಹಾಲಪ್ಪ ವಾಮಕೆರಿ, ಶಾಲೆಯ ಪ್ರಾಚಾರ್ಯ ಶರಣಕುಮಾರ ಬುಗಟಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು ಇಂತಹ ಸ್ಪರ್ಧೆಗಳ ಮುಖ್ಯ ಉದ್ದೇಶ. ಶ್ರಾವಣಿಯಂತಹ ವಿದ್ಯಾರ್ಥಿಗಳ ಸಾಧನೆ ಇತರರಿಗೂ ಪ್ರೇರಣೆಯಾಗಲಿ.
— ಎಸ್.ಎಸ್. ಶಿರಹಟ್ಟಿ, ವಿಭಾಗೀಯ ಅಂಚೆ ಅಧೀಕ್ಷಕ, ಗದಗ



