ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಸೌಲಭ್ಯ ಹಾಗೂ ವಿವಿಧ ಯೋಜನೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಪ್ರಜಾಸೇವಾ ಆಂದೋಲನ’ಕ್ಕೆ ಲಕ್ಷ್ಮೇಶ್ವರದಲ್ಲಿ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಶನಿವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳ ಮೂಲಕ 200ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಯಿತು.
‘ಸರ್ಕಾರ ಬಾಗಿಲಿಗೆ ಬಂತು, ಸರ್ಕಾರ-ಸೇವೆಗೆ ಇರಲಿ ಸಹಕಾರ’ ಎಂಬ ಆಶಯದಡಿ ನಡೆದ ಕಾರ್ಯಕ್ರಮಕ್ಕೆ ಉಪತಹಸೀಲ್ದಾರ ಮಂಜುನಾಥ ಅಮಾಸಿ ಚಾಲನೆ ನೀಡಿದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದರು.
ಆಹಾರ, ಕಂದಾಯ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕೌಂಟರ್ಗಳನ್ನು ತೆರೆಯಲಾಗಿತ್ತು. ಹೊಸ ರೇಷನ್ ಕಾರ್ಡ್ಗಾಗಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದು, ಒಟ್ಟಾರೆ 200ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾದವು. ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ಹಾಗೂ ಕುಟುಂಬ ನಿರ್ವಹಣೆ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಯಿತು.
ತಾಪಂ ಇಒ ಮಂಜುಳಾ ಹಕಾರಿ ಮಾತನಾಡಿ, ಸರ್ಕಾರಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಅರ್ಹರಿಗೆ ಸೌಲಭ್ಯ ತಲುಪಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಹೆಸ್ಕಾಂ ಎಇ ಆಂಜನಪ್ಪ ಬಿ., ವಿಬಿಜಿ-ರಾಮ್-ಜಿ ಸಹಾಯಕ ನಿರ್ದೇಶಕ ಕೃಷ್ಣಪ್ಪ ಧರ್ಮರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸರ್ಕಾರಿ ಪ್ರಾಥಮಿಕ ಶಾಲೆ ನಂ.2ರ ಮಕ್ಕಳು ನಾಡಗೀತೆ ಹಾಡಿದರು. ಶಿಕ್ಷಕ ಡಿ.ಡಿ. ಲಮಾಣಿ ನಿರೂಪಿಸಿದರು.
ಸಾರ್ವಜನಿಕರು ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದೇ ಆಂದೋಲನದ ಉದ್ದೇಶ. ಪ್ರತಿ ತಿಂಗಳ 1 ಮತ್ತು 3ನೇ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಅಹವಾಲು ಸ್ವೀಕರಿಸಲಾಗುವುದು. ಅಧಿಕಾರಿಗಳು ಅಹವಾಲು ಆಲಿಸುವುದಷ್ಟೇ ಅಲ್ಲದೆ, ನಿಯಮಾನುಸಾರ ಶೀಘ್ರ ಪರಿಹಾರ ಕಲ್ಪಿಸಬೇಕು.
— ಮಂಜುನಾಥ ಅಮಾಸಿ, ಉಪತಹಸೀಲ್ದಾರ್

