ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಧರ್ಮ ಹಾಗೂ ಅದರ ಆಚರಣೆಗಳ ಕುರಿತು ಅವಹೇಳನಕಾರಿ ಅಥವಾ ಅಪಮಾನಕರ ಹೇಳಿಕೆ ನೀಡುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿಯವರಿಗೆ ಶೋಭೆ ತರುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಮಾರುತಿ ಪವಾರ ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ. ಆದರೆ ಯಾವುದೇ ಧರ್ಮದ ನಂಬಿಕೆ, ಆಚರಣೆ ಹಾಗೂ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳು ಸಮಾಜದಲ್ಲಿ ಅನಗತ್ಯ ಅಸಮಾಧಾನ ಮತ್ತು ಸಂಘರ್ಷಕ್ಕೆ ಕಾರಣವಾಗಬಹುದು. ಆದ್ದರಿಂದ ಸಚಿವರು ಧಾರ್ಮಿಕ ವಿಚಾರಗಳಲ್ಲಿ ಮಾತನಾಡುವಾಗ ಸಂಯಮ, ಜವಾಬ್ದಾರಿ ಹಾಗೂ ಪರಸ್ಪರ ಗೌರವ ಕಾಪಾಡಬೇಕು ಎಂದರು.
ಹಿಂದೂ ಧರ್ಮವನ್ನು ಸಚಿವರ ಟೀಕಿಸುವ ಹೆಸರಿನಲ್ಲಿ ಕೋಟ್ಯಂತರ ಜನರ ನಂಬಿಕೆಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ ಸಚಿವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿ ವಿಷಾದ ವ್ಯಕ್ತಪಡಿಸುವುದು ಸೂಕ್ತ ಎಂದು ಒತ್ತಾಯಿಸಿದರು.
ಸಚಿವರು ಎಲ್ಲ ಧರ್ಮಗಳಿಗೂ ಸಮಾನ ಗೌರವ ನೀಡುವುದರೊಂದಿಗೆ, ತಮಗೆ ವಹಿಸಿರುವ ಖಾತೆಯ ಜವಾಬ್ದಾರಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಮೆಚ್ಚುಗೆ ಗಳಿಸಬೇಕೇ ಹೊರತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳಿಂದಲ್ಲ ಎಂದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



