ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಸದಾ ಅಧ್ಯಯನಶೀಲರಾಗಿರಬೇಕು. ಮುಗ್ಧ ಮಕ್ಕಳ ಮನಸ್ಸಿನಲ್ಲಿ ಅಕ್ಷರದ ಬೀಜ ಬಿತ್ತುವ ಕಾರ್ಯದಲ್ಲಿ ನಿರಂತರ ತೊಡಗಿ, ಅವರ ಭವ್ಯ ಭವಿಷ್ಯಕ್ಕೆ ಸಕಲ ರೀತಿಯಲ್ಲಿ ಸಿದ್ಧಗೊಳಿಸುವ ಹೊಣೆಗಾರಿಕೆ ಶಿಕ್ಷಕ ಸಮುದಾಯದ ಮೇಲಿದೆ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಹೇಳಿದರು.
ಗದುಗಿನ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀಮತಿ ಭಾರತಿ ಕುಲಕರ್ಣಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ವ್ಯಕ್ತಿ ಹಾಗೂ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರಲ್ಲಿ ಅಕ್ಷರದ ಅರಿವು ಮೂಡಿಸಿ, ಅವರನ್ನು ಉನ್ನತ ವ್ಯಕ್ತಿಗಳನ್ನಾಗಿ ರೂಪಿಸಲು ಅಗತ್ಯವಾದ ಅಡಿಪಾಯವನ್ನು ಪ್ರಾಥಮಿಕ ಹಂತದಲ್ಲಿಯೇ ಗಟ್ಟಿಗೊಳಿಸುವ ಪ್ರಾಥಮಿಕ ಶಾಲಾ ಶಿಕ್ಷಕರು ಮಕ್ಕಳ ಭವಿಷ್ಯದ ನಿಜವಾದ ರೂವಾರಿಗಳು ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆ ಬಿ.ವಿ. ಕುಲಕರ್ಣಿ, ಸರ್ಕಾರಿ ಶಾಲೆಗಳು ಮಕ್ಕಳಲ್ಲಿ ‘ನನ್ನತನ’ದ ಜತೆಗೆ ಸಾಮಾಜಿಕ ಅರಿವನ್ನೂ ಮೂಡಿಸುತ್ತವೆ. ಶಿಕ್ಷಕರು ಪರಿಶ್ರಮದಿಂದ ಕಲಿಸುವಿಕೆಯಲ್ಲಿ ತೊಡಗಿಸಿಕೊಂಡಾಗ ಮಕ್ಕಳು ಕಲಿಕೆಯಲ್ಲಿ ಯಶಸ್ಸು ಸಾಧಿಸುತ್ತಾರೆ. ತಮ್ಮ ಪರಿಶ್ರಮವನ್ನು ಸಮುದಾಯ ಗುರುತಿಸಿ ಗೌರವಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.
ಅಕ್ಕಮಹಾದೇವಿಯ ಕದಳಿಶ್ರೀ ಮಹಿಳಾ ವೇದಿಕೆ ವತಿಯಿಂದ ಭಾರತಿ ಕುಲಕರ್ಣಿ ಅವರನ್ನು ಸನ್ಮಾನಿಸಿ ಗೌರವಿಸಿ, ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿಯರಾದ ವಿ.ಎಸ್. ಜಕರಡ್ಡಿ ಹಾಗೂ ಎಚ್.ಎಲ್. ಆಸಂಗಿ, ಶಿಕ್ಷಕಿಯರಾದ ವಿ.ಎ. ಕುಂಟೋಜಿ, ಸರ್ವಮಂಗಳಾ ಗುಜಮಾಗಡಿ, ಮಂಜುಳಾ ಕೊಳ್ಳಿ, ರೇಣುಕಾ ಹೊಸಮನಿ, ಎಫ್.ಎಸ್. ಹಿರೇಮಠ, ಶೋಭಾ ವಗ್ಗಿ, ಶ್ರೇಯಾ ಬಾರಾಟಕ್ಕೆ ಸೇರಿದಂತೆ ಶಾಲಾ ಮಕ್ಕಳು, ಪಾಲಕರು ಉಪಸ್ಥಿತರಿದ್ದರು.



