ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ರಂಭಾಪುರಿ ನಗರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ನಿವಾಸಿಗಳು ಮಂಗಳವಾರ ಪುರಸಭೆ ಕಚೇರಿಗೆ ತೆರಳಿ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ನಿವಾಸಿಗಳಾದ ಗೋವಿಂದಪ್ಪ ಅರಳಿಕಟ್ಟಿ ಹಾಗೂ ಸುನೀಲ ಸರ್ವದೆ ಮಾತನಾಡಿ, ಹಲವು ವರ್ಷಗಳಿಂದ ಮೂಲಸೌಲಭ್ಯಗಳ ಕೊರತೆಯಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ನಗರದಲ್ಲಿ ಸಮರ್ಪಕ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಸಂಚರಿಸಲು ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟೆಗಳು ಬೆಳೆದು ಸಂಚಾರಕ್ಕೂ ತೊಂದರೆಯಾಗುತ್ತಿದೆ. ಕುಡುಕರು ಹಾಗೂ ಕಳ್ಳರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆ ದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಗರದ ಅಗತ್ಯ ಸ್ಥಳಗಳಲ್ಲಿ ಕಸದ ಡಬ್ಬಿಗಳನ್ನು ಅಳವಡಿಸಿ, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಕಸ ಸಂಗ್ರಹಿಸುವ ವಾಹನ ಪ್ರತಿದಿನ ರಂಭಾಪುರಿ ನಗರಕ್ಕೆ ಆಗಮಿಸುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸ್ವಚ್ಛತೆ ಹಾಗೂ ಮೂಲಸೌಲಭ್ಯಗಳಿಗೆ ಆದ್ಯತೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಮೇಶ ದುರಗಣ್ಣವರ, ಅಕ್ಷಯ ಅಚಲಕರ, ಸೋಮಶೇಖರ ಕೊರದಾಳ, ಬಸವೇಣೆಪ್ಪ ದೂಮಖಾತಿ, ಮುತ್ತು ದುರಗಣ್ಣವರ, ಪ್ರಜ್ವಲ ಅಂಗಡಿ, ಫಕೀರಪ್ಪ ಸೊರಟೂರ, ಪವನಶಿಂಗ ಕಿಲ್ಲೇದಾರ, ಬಸವರಾಜ ಕುಂದ್ರಳ್ಳಿ, ಸಿದ್ದಪ್ಪ ಶೇರಸೂರಿ, ಸುಷ್ಮಾ ಸರ್ವದೆ, ಮುಕ್ತಾ ಪೂಜಾರ, ಲಕ್ಷ್ಮಿ ಕಡಬಿ, ರತ್ನವ್ವ ಮಾಳದಕರ, ಶಾರದಾ ಭಜಂತ್ರಿ, ಮಹಾದೇವಿ ಸೊರಟೂರ, ಕಮಲಾ ಮೋಡೆರ ಸೇರಿದಂತೆ ಅನೇಕ ನಿವಾಸಿಗಳು ಉಪಸ್ಥಿತರಿದ್ದರು.



