ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದಲ್ಲಿ ಕೈಗೊಳ್ಳುವ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು ನಿಗದಿತ ಅನುದಾನಕ್ಕೆ ಅನುಗುಣವಾಗಿ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಬೇಕು ಎಂದು ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಎರಡು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನಸಭೆ ಅಧ್ಯಕ್ಷ ಹಾಗೂ ತಮ್ಮ ತಂದೆ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದು, ಅಗತ್ಯ ಅನುದಾನ ತರುವಲ್ಲಿ ಹಿಂದೆ ಬಿದ್ದಿಲ್ಲ. ಬಂದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವುದು ಎಲ್ಲರ ಜವಾಬ್ದಾರಿ ಎಂದರು.
ರೋಣ-ಜಕ್ಕಲಿ-ನರೇಗಲ್ಲ-ಅಬ್ಬಿಗೇರಿ ರಸ್ತೆ ಸುಧಾರಣೆಗೆ ₹೧೫೦ ಲಕ್ಷ ಹಾಗೂ ಗಾಂಧಿ ಭವನ ನವೀಕರಣಕ್ಕೆ ₹೩೫ ಲಕ್ಷ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗಳು ಶೀಘ್ರ ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲವಾಗಬೇಕು. ಗಾಂಧಿ ಭವನದಲ್ಲಿ ಹಿಂದಿನಂತೆ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಬೇಕು ಹಾಗೂ ಕಟ್ಟಡ ದುರುಪಯೋಗವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ, ಪಪಂ ಮಾಜಿ ಅಧ್ಯಕ್ಷ ಫಕೀರಪ್ಪ ಮಳ್ಳಿ, ಮಾಜಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



