HomePolitics Newsಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನವಿಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನವಿಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

For Dai;y Updates Join Our whatsapp Group

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಪರಮೇಶ್ವರ್, ಸಿದ್ದರಾಮಯ್ಯ ಅವರು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುವುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದಾರೆ. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಚಾರ ಮುಗಿದುಹೋದ ಅಧ್ಯಾಯವಾಗಿದ್ದು, ಇದನ್ನು ಪದೇಪದೇ ಚರ್ಚಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಪ್ರಸ್ತುತ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವುದರಿಂದ ಅವರ ದೆಹಲಿ ಭೇಟಿ ಸಹಜ ಪ್ರಕ್ರಿಯೆಯಾಗಿದೆ. ಈ ಭೇಟಿಗೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು, ಚುನಾವಣೆ ನಡೆಸಬಾರದು ಎಂಬುದು ಕಾಂಗ್ರೆಸ್‌ ಪಕ್ಷದ ನಿರ್ಧಾರವಾಗಿತ್ತು. ಅದರಂತೆ ಕೊನೆಯ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ನಿರ್ಣಾಯಕ ಸಭೆಯಲ್ಲಿ ಕೆ.ಎನ್‌. ರಾಜಣ್ಣ ಅವರೂ ಹಾಜರಿದ್ದರು. ಅವರ ಸಮ್ಮತಿಯ ಮೇರೆಗೆ ಅಧ್ಯಕ್ಷರ ಆಯ್ಕೆ ನಡೆದಿದೆ. ಹೀಗಾಗಿ ಈ ವಿಚಾರದಲ್ಲಿ ಯಾವುದೇ ಅಸಮಾಧಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರ ಹುದ್ದೆಯನ್ನು ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರದಡಿ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಮುಂದೆ ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬರದಿದ್ದರೆ ಕೆ.ಎನ್‌. ರಾಜಣ್ಣ ಅವರಿಗೆ ಅಧಿಕಾರ ತಪ್ಪಿದಂತಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅಪೆಕ್ಸ್‌ ಬ್ಯಾಂಕ್‌ ಸ್ವತಂತ್ರ ಹಾಗೂ ಪಕ್ಷಾತೀತ ಸಂಸ್ಥೆಯಾಗಿದೆ ಎಂದು ಹೇಳಿದರು.

ಅದರ ಆಡಳಿತ ಮಂಡಳಿಯ ನಿರ್ದೇಶಕರು ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತಾರೆ. ಹೀಗಾಗಿ ಈ ವಿಚಾರದಲ್ಲಿ ಈಗಲೇ ಯಾವುದೇ ನಿರ್ಧಾರ ಅಥವಾ ಊಹಾಪೋಹಗಳಿಗೆ ಅವಕಾಶವಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img