HomeKarnataka Newsಬಿಜೆಪಿ ಮಾತು ಕೇಳಿ ಶಿಸ್ತುಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ತೀರ್ಮಾನ ಮಾಡೋದು SP ಅಲ್ಲ, ನಾನು ಎಂದ...

ಬಿಜೆಪಿ ಮಾತು ಕೇಳಿ ಶಿಸ್ತುಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ತೀರ್ಮಾನ ಮಾಡೋದು SP ಅಲ್ಲ, ನಾನು ಎಂದ ಪ್ರಿಯಾಂಕ್ ಖರ್ಗೆ

For Dai;y Updates Join Our whatsapp Group

ಬೆಂಗಳೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೂಡಿರುವ ‘ಅಮಾನತು’ ಅಸ್ತ್ರಕ್ಕೆ ರಾಜ್ಯ ಸರ್ಕಾರ ಮಣಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯವರು ಆಗ್ರಹಿಸಿದ್ದಾರೆ ಎಂಬ ಕಾರಣಕ್ಕೆ ತಕ್ಷಣವೇ ಅಧಿಕಾರಿಯನ್ನು ಅಮಾನತು ಮಾಡಲು ಸಾಧ್ಯವಿಲ್ಲ ಎಂದು ಅವರು ಖಡಕ್ ತಿರುಗೇಟು ನೀಡಿದ್ದಾರೆ.

ಗಣೇಶ ಮೆರವಣಿಗೆ ಭದ್ರತೆ ಹಾಗೂ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಬಿಜೆಪಿಯವರು ಹೇಳಿದಂತೆ ನಾವು ಕೇಳಲು ಅಥವಾ ಆಡಳಿತ ನಡೆಸಲು ಸಾಧ್ಯವಿಲ್ಲ. ಅವರ ಮಾತಿಗೆ ಮಣಿದು ಅಧಿಕಾರಿಯನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ವಿಚಾರದಲ್ಲಿ ಎಸ್‌ಪಿ ವರದಿಯ ಬಳಿಕ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ. ಎಸ್‌ಪಿ ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಗಣೇಶೋತ್ಸವ, ಈದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ. ಹಬ್ಬಗಳ ವಿಚಾರದಲ್ಲಿ ವಿರೋಧ ಪಕ್ಷಗಳು ಅನಗತ್ಯವಾಗಿ ವಿವಾದ ಸೃಷ್ಟಿಸುವುದನ್ನು ಬಿಟ್ಟು, ಜನರು ಶಾಂತಿಯುತವಾಗಿ ಹಬ್ಬ ಆಚರಿಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರನ್ನೂ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. “ಆರ್. ಅಶೋಕ್ ಗೃಹ ಸಚಿವರಾಗಿದ್ದಾಗ ಇಂತಹ ಶಾಂತಿ ಸಭೆಗಳನ್ನು ನಡೆಸಿ ನಿಯಮಾವಳಿಗಳನ್ನು ರೂಪಿಸಿರಲಿಲ್ಲವೇ? ಅಂದು ಇದ್ದ ನಿಯಮಗಳೇ ಇಂದೂ ಇವೆ” ಎಂದು ಹೇಳಿದ್ದಾರೆ.

ಮೈಸೂರಿನ ಬಿಜೆಪಿ ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದ ಸಚಿವರು, ಠಾಣೆಗೆ ನುಗ್ಗುತ್ತೇವೆ ಎಂದು ಬೆದರಿಕೆ ಹಾಕುವ ಬದಲು ಕಾನೂನು ಪಾಲಿಸಬೇಕು ಎಂದು ಹೇಳಿದ್ದಾರೆ. “ಅವರದೇ ಸರ್ಕಾರ ಇದ್ದಾಗ ಯಾರಾದರೂ ಠಾಣೆಗೆ ನುಗ್ಗುತ್ತೇವೆ ಎಂದಿದ್ದರೆ ಸುಮ್ಮನಿರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

ಹಬ್ಬದ ದಿನಗಳಲ್ಲಿ ಪೊಲೀಸರು ತಮ್ಮ ಕುಟುಂಬ ಹಾಗೂ ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹೀಗಾಗಿ ಸಾರ್ವಜನಿಕರು ಹಾಗೂ ಮೆರವಣಿಗೆ ಆಯೋಜಕರು ಪೊಲೀಸರ ಸೂಚನೆಗಳನ್ನು ಗೌರವಿಸಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಯಾವುದೇ ಆಚರಣೆಯಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಬಾರದು ಎಂದು ಅವರು ತಿಳಿಸಿದ್ದಾರೆ.

ಇನ್‌ಸ್ಪೆಕ್ಟರ್ ಹೇಳಿಕೆ ಬಗ್ಗೆ ಸಚಿವರ ಸಮರ್ಥನೆ

ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇನ್‌ಸ್ಪೆಕ್ಟರ್ ಸ್ವಲ್ಪ ಖಾರವಾಗಿ ಮಾತನಾಡಿರಬಹುದು. ಆದರೆ ಮೆರವಣಿಗೆಗೆ ಹಲವು ಮಾರ್ಗಗಳಿದ್ದು, ನಿಯಮಗಳನ್ನು ಪಾಲಿಸುವುದು ಮುಖ್ಯ ಎಂದು ಹೇಳಿದ್ದಾರೆ.

“ನಿರ್ದಿಷ್ಟ ಸೂಕ್ಷ್ಮ ಸ್ಥಳದಲ್ಲೇ ಪಟಾಕಿ ಹಚ್ಚುವುದು ಏಕೆ ಎಂಬ ಪ್ರಶ್ನೆ ಬರುತ್ತದೆ” ಎಂದು ಸಚಿವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಧನಂಜಯ್ ಅವರು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸ್ಥಳೀಯ ಸೂಕ್ಷ್ಮತೆ ಹಾಗೂ ಹಿಂದಿನ ವರ್ಷ ಉಂಟಾಗಿದ್ದ ಗೊಂದಲಗಳ ಬಗ್ಗೆ ಅವರಿಗೆ ಸ್ಪಷ್ಟ ಅರಿವಿದೆ ಎಂದು ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡಿದ ಸೂಚನೆಗಳನ್ನೇ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಶಾಂತಿ ಕದಡಲು ಯತ್ನಿಸುತ್ತಿರುವವರು ಯಾರು ಎಂಬುದನ್ನು ತಿಳಿಯಲು ಬಿಜೆಪಿಯವರು ಮೊದಲು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮಾತುಗಳನ್ನು ಕೇಳಲಿ ಎಂದು ಲೇವಡಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img