ಬೆಳಗಾವಿ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಮನೆಯಲ್ಲಿದ್ದ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಮನೆಯಲ್ಲಿದ್ದವರು ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ.
ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ಶಾರದಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50) ಹಾಗೂ ರೋಷನ್ ಗಜಾನನ ದಮೋನೆ (21) ಮೃತಪಟ್ಟಿದ್ದಾರೆ.
ಇನ್ನು ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ. ಮೃತ ಕುಟುಂಬ ದಿನಗೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು ಎನ್ನಲಾಗಿದೆ. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಚಾವ್ಹಾಟ್ ಗಲ್ಲಿಯಲ್ಲಿ ತೀವ್ರ ದುಃಖದ ವಾತಾವರಣಕ್ಕೆ ಕಾರಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಸೇರಿದಂತೆ ಹೆಚ್ಚಿನ ಮಾಹಿತಿ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



