ಕಲಬುರಗಿ: ಗಣೇಶನ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ.
ಮೃತರನ್ನು ಕೊಟನೂರು ಬಡಾವಣೆಯ ನಿವಾಸಿ ಪ್ರಶಾಂತ್ ಬಿರಾದರ್ (23) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪ್ರಶಾಂತ್ ತಮ್ಮ ಸ್ನೇಹಿತರೊಂದಿಗೆ ಗಣೇಶನ ಮೂರ್ತಿ ತರಲು ತೆರಳುತ್ತಿದ್ದರು.
ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬೈಕ್ಗೆ ಟಚ್ ಆಗಿದ್ದು, ಬೈಕ್ಗಳು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿವೆ. ಅಪಘಾತದಲ್ಲಿ ಇಬ್ಬರು ಸವಾರರ ತಲೆಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಬಿರಾದರ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



