ಬೆಂಗಳೂರು: ಬಡವರಿಗೆ ನಿವೇಶನ ನೀಡುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ, ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ವಿವಿಧ ವಿಷಯಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.
ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ನಿವೇಶನ ಸಿದ್ಧಪಡಿಸಲು ಅಗತ್ಯವಿರುವ ಭೂಮಿಯನ್ನು ಇನ್ನೂ ಗುರುತಿಸಿಲ್ಲ. ಹೀಗಾಗಿ ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಅಗತ್ಯವಿರುವ ತಾಂತ್ರಿಕ ಸಹಕಾರವನ್ನು ಹಿರಿಯ ಅಧಿಕಾರಿಗಳು ನೀಡಲಿದ್ದಾರೆ ಎಂದು ಜಿ. ಪರಮೇಶ್ವರ ತಿಳಿಸಿದರು.
ಇದೇ ವೇಳೆ ಭಾರತ್ ಜೋಡೋ ಯುವ ಸಂಘ ಯೋಜನೆಯ ಅನುಷ್ಠಾನಕ್ಕೂ ಹೆಚ್ಚಿನ ವೇಗ ನೀಡುವಂತೆ ಸೂಚಿಸಿದರು. ಸಂಘಗಳ ನೋಂದಣಿ, ಮೆಂಟರ್ಗಳ ನೇಮಕ ಸೇರಿದಂತೆ ಸಂಘಗಳನ್ನು ಆರಂಭಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಅರ್ಜಿಗಳನ್ನು ಭರ್ತಿ ಮಾಡಿಸಬೇಕು ಎಂದು ನಿರ್ದೇಶನ ನೀಡಿದರು.
ಭಾರತ್ ಜೋಡೋ ಯುವಕ ಸಂಘವನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಿಂದ ಸರ್ಕಾರ ಮತ್ತು ಅಧಿಕಾರಿಗಳಿಗೆ ಉತ್ತಮ ಹೆಸರು ಬರಲಿದೆ ಎಂದು ಜಿ. ಪರಮೇಶ್ವರ ಹೇಳಿದರು.
ಜಾಸೇವಾ ಅಭಿಯಾನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅವುಗಳ ವಿಲೇವಾರಿಗೆ ಅಧಿಕಾರಿಗಳು ವೇಗ ನೀಡಬೇಕು ಎಂದು ಸೂಚಿಸಿದರು. ಪಹಣಿ ತಿದ್ದುಪಡಿ, ಪೋಡಿ ಹಾಗೂ ಪಿಂಚಣಿ ಸಮಸ್ಯೆ ಸೇರಿದಂತೆ ವಿವಿಧ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿದರು.
ಆರ್ಟಿಸಿ ಹಾಗೂ ಪೋಡಿ ಪ್ರಕರಣಗಳ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದೆ. ಆದರೂ ಅಧಿಕಾರಿಗಳಿಗೆ ಯಾವುದೇ ಗೊಂದಲ ಉಂಟಾದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ವೆಂಕಟರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



