ಬೆಂಗಳೂರು: ಕಾಂಗ್ರೆಸ್ನ ಹಲವು ನಾಯಕರು ಪಕ್ಷದೊಳಗೆ ಅಸಮಾಧಾನಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆದು ಎನ್ಡಿಎ ಒಕ್ಕೂಟ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಆರ್. ಅಶೋಕ್, ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಗೌರವ ನೀಡಲಾಗಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದಕ್ಕೆ ಕಾಂಗ್ರೆಸ್ ಇನ್ನೂ ಸ್ಪಷ್ಟ ಕಾರಣ ನೀಡಿಲ್ಲ ಎಂದು ಹೇಳಿದರು.
ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಅವರ ಮಾತಿಗೆ ಪಕ್ಷದಲ್ಲಿ ಹಿಂದಿನಷ್ಟು ಪ್ರಾಮುಖ್ಯತೆ ಇಲ್ಲ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರನ್ನು ‘ಯೂಸ್ ಆ್ಯಂಡ್ ಥ್ರೋ’ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ನ ಇತರ ನಾಯಕರಲ್ಲೂ ಅಸಮಾಧಾನವಿದ್ದು, ಹಲವು ನಾಯಕರು ಬೇರೆ ಪಕ್ಷ ಸೇರುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರೊಂದಿಗೆ ಹಲವು ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂಬುದಾಗಿ ಆರ್. ಅಶೋಕ್ ಹೇಳಿಕೊಂಡಿದ್ದಾರೆ.
ಇದೇ ವೇಳೆ, ಮಂಗಳೂರು ಸಚಿವ ಸಂಪುಟ ಸಭೆ ಬಗ್ಗೆ ಮಾತನಾಡಿ, ಮಂಗಳೂರು ಕ್ಯಾಬಿನೆಟ್ ಉಪಯೋಗ ಇಲ್ಲ. ಸರ್ಕಾರದಲ್ಲಿ ಹಣ ಇಲ್ಲ, ಮೂಗಿಗೆ ತುಪ್ಪ ಸವರಿ ಬರ್ತಾರೆ ಅಷ್ಟೇ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಮಂಗಳೂರಿಗೆ ಏನೂ ಕೊಡಲಿಲ್ಲ, ಈಗ ಆರ್ಥಿಕ ಸಂಕಷ್ಟದಲ್ಲಿ ಡಿಕೆಶಿ ಕೂಡ ಏನೂ ಕೊಡಲ್ಲ ಎಂದು ಟೀಕೆ ಮಾಡಿದರು.
ಮೂರು ದಿನ ವಿಶೇಷ ಅಧಿವೇಶ ಕರೆಯಲಾಗಿದೆ. ನಾವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ್ತೇವೆ. ವಿಶೇಷ ಅಧಿವೇಶನಲ್ಲೂ ನಾವು ಸಾಲಮನ್ನಾ ಆಗ್ರಹಿಸಿ ಚರ್ಚೆ ಮಾಡ್ತೇವೆ. ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ಕರೆದಿದೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.



