ಬೆಂಗಳೂರು: ರಾಜ್ಯದ ಜನರಿಗೆ ಈಗಾಗಲೇ ಬೆಲೆ ಏರಿಕೆಯ ಬಿಸಿ ತಟ್ಟುತ್ತಿರುವ ಬೆನ್ನಲ್ಲೇ, ನಂದಿನಿ ಹಾಲಿನ ದರ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸುವಂತೆ ಹಾಲು ಉತ್ಪಾದಕರ ಒಕ್ಕೂಟಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಹಾಲು ಉತ್ಪಾದಕರ ಒಕ್ಕೂಟಗಳ ಪ್ರತಿನಿಧಿಗಳು, ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ ಮಾಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ರೈತರಿಗೆ ನೀಡುವ ಪ್ರೋತ್ಸಾಹ ಧನವನ್ನೂ ಪ್ರತಿ ಲೀಟರ್ಗೆ ₹8ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಎಂಟು ತಿಂಗಳಿಂದ ಸರ್ಕಾರಕ್ಕೆ ಈ ಕುರಿತು ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹಾಲು ಉತ್ಪಾದಕರ ಒಕ್ಕೂಟಗಳು ಹೇಳಿವೆ. ರೈತರ ಹಿತ ಕಾಪಾಡುವ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿರುವ ಒಕ್ಕೂಟಗಳು, ಬೇಡಿಕೆ ಈಡೇರದಿದ್ದರೆ ಮೂರು ದಿನಗಳಲ್ಲಿ ವಿಧಾನಸೌಧ ಚಲೋ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.
ದರ ಏರಿಕೆಗೆ ಹಾಲು ಉತ್ಪಾದಕರ ಒಕ್ಕೂಟಗಳ ಕಾರಣಗಳೇನು?
ಹಾಲಿನ ದರ ಹೆಚ್ಚಳಕ್ಕೆ ಹಾಲು ಉತ್ಪಾದಕರ ಒಕ್ಕೂಟಗಳು ಹಲವು ಕಾರಣಗಳನ್ನು ಮುಂದಿಟ್ಟಿವೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೊರತೆಯಿಂದಾಗಿ ಹಸಿರು ಮೇವು ಹಾಗೂ ಪಶು ಆಹಾರದ ಲಭ್ಯತೆಯ ಮೇಲೂ ಪರಿಣಾಮ ಬೀರಿದೆ ಎಂದು ಒಕ್ಕೂಟಗಳು ತಿಳಿಸಿವೆ.
ರಾಜ್ಯದಲ್ಲಿ ಶೇ.70ರಷ್ಟು ಮಳೆ ಕೊರತೆಯಾಗಿದೆ ಎಂದು ಒಕ್ಕೂಟಗಳು ಹೇಳಿದ್ದು, ಇದರ ಪರಿಣಾಮವಾಗಿ ಹುಲ್ಲಿನ ಕೊರತೆ ಎದುರಾಗಿದೆ. ಪಶು ಆಹಾರಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳು, ಮೆಕ್ಕೆಜೋಳ ಹಾಗೂ ಇಂಡಿ-ಬೂಸಾದ ದರದಲ್ಲಿ ಶೇ.25ರಷ್ಟು ಏರಿಕೆಯಾಗಿದೆ ಎಂದು ತಿಳಿಸಿವೆ.
ಇದರ ಜೊತೆಗೆ ರಾಸುಗಳಿಗೆ ಬಳಸುವ ನೆಲಹಾಸಿನ ದರ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲೂ ಹೆಚ್ಚಳವಾಗಿದೆ. ಹೀಗಾಗಿ ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗಿದ್ದು, ರೈತರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಅಗತ್ಯ ಎಂದು ಹಾಲು ಉತ್ಪಾದಕರ ಒಕ್ಕೂಟಗಳು ವಾದಿಸಿವೆ.
ಹಾಲಿನ ದರ ಹೆಚ್ಚಳದ ಪ್ರಸ್ತಾವನೆಗೆ ಸರ್ಕಾರ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ. ಪ್ರಸ್ತಾವನೆ ಅಂಗೀಕಾರವಾದರೆ ನಂದಿನಿ ಹಾಲಿನ ಬೆಲೆ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.



