ವಿಜಯಸಾಕ್ಷಿ ಸುದ್ದಿ, ಗದಗ
ಮೇ 15ರಂದು ಬೆಳಗಿನ ಜಾವ ಗದಗ ಬಾಪೂಜಿ ನಗರದಲ್ಲಿರುವ ಮನೆಯೊಂದರ ಬಾಗಿಲಿಗೆ ಹಾಕಿದ್ದ ಕೀಲಿಯನ್ನು ಮುರಿದು ಒಳನುಗ್ಗಿ, ಟ್ರೆಝರಿಯ ಬೀಗ ಮುರಿದು, ಅದರೊಳಗಿದ್ದ 1.05 ಲಕ್ಷ ರೂ. ಬೆಲೆಬಾಳುವ ಬಂಗಾರದ ತಾಳಿ ಸರವನ್ನು ಕಳ್ಳತನ ಮಾಡಿದ ಕಳ್ಳನನ್ನು ಶಹರ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ವಸಂತ ಎಂ.ಎಲ್ ಮೇ 16ರಂದು ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ಕಲಂ 454, 457, 380ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಬೇಧಿಸುವ ಉದ್ದೇಶದಿಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾರ್ಗದರ್ಶನದಲ್ಲಿ ಡಿಸಿಆರ್ ಬಿ ಡಿಎಸ್ಪಿ ತಮ್ಮರಾಯ ಪಾಟೀಲ ನೇತೃತ್ವದಲ್ಲಿ ಪಿಐ ಜಯಂತ ಗೌಳಿ, ಮಹಿಳಾ ಪಿಎಸ್ಐ ಜಿ.ಟಿ. ಜಕ್ಕಲಿ, ಆರ್.ಆರ್. ಮುಂಡೆವಾಡಗಿ, ಯೂಸುಫ್ ಜ ಮುಲಾ, ಸಿಬ್ಬಂದಿಗಳಾದ ವೈ.ಬಿ.ಪಾಟೀಲ, ಎಸ್.ಎಸ್. ಮಾವಿನಕಾಯಿ, ಉಮೇಶ ಸುಣಗಾರ, ಕೆ.ಡಿ. ಜಮಾದಾರ, ಪಿ.ಎಸ್. ಕಲ್ಲೂರ, ಪಿ.ಎ.ಭರಮಗೌಡ್ರ, ಅಣ್ಣಪ್ಪ ಕವಲೂರ ಒಳಗೊಂಡು ವಿಶೇಷ ತಂಡವನ್ನು ರಚಿಸಿದ್ದರು.
ಸದರಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಾದ ಸುನೀಲ್ ಸಂಜೀವ ಮುಳಗುಂದ ಎಂಬುವವನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ವಸ್ತುಗಳು ಹಾಗೂ ಕಳುವಾಗಿದ್ದ ಬಂಗಾರದ ತಾಳಿ ಸರವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಈ ವಿಶೇಷ ತಂಡದ ಕಾರ್ಯಾಚರಣೆಗೆ ಎಸ್ಪಿ ಶಿವಪ್ರಕಾಶ ದೇವರಾಜು ಶ್ಲಾಘಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.