ಬೆಂಗಳೂರು;- ಪಕ್ಷಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿಯಿದೆ. ಪಕ್ಷಕ್ಕೆ ಧಕ್ಕೆಯಾಗುವಂತಿದ್ದರೆ ನಾನು ಮಾತನಾಡುವುದಿಲ್ಲ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ.
ಪಕ್ಷಕ್ಕೆ ಹಾಗೂ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಅಗತ್ಯ ಎಂಬುದಾಗಿ ಹೇಳಿದ್ದೆ. ಅದನ್ನು ಹೊರತುಪಡಿಸಿ ಯಾರೋ ಹೇಳಿದರೆಂಬ ಕಾರಣಕ್ಕೆಲ್ಲಾ ನಾನು ಮಾತನಾಡುವುದಿಲ್ಲ’ ಎಂದು ಹೇಳಿದರು.
ಕಾಂಗ್ರೆಸ್ನಿಂದ 136 ಶಾಸಕರು ಗೆದ್ದಿದ್ದೇವೆ ಎಂದು ಬೀಗುವ ಸ್ಥಿತಿಯಲ್ಲಿಲ್ಲ. ಲೋಕಸಭೆ ಚುನಾವಣೆಗೆ ನಿರ್ಲಕ್ಷ್ಯ ತೋರಬಾರದು. ಹಾಗಾಗಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಬಗ್ಗೆ ಮಾತನಾಡಿದ್ದೇನೆ. ಇದನ್ನು ಈಗಾಗಲೇ ಕೇಂದ್ರದ ನಾಯಕರ ಗಮನಕ್ಕೂ ತರಲಾಗಿದೆ’ ಎಂದರು.
ಪಕ್ಷಕ್ಕೆ ಮುಜುಗರ, ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಧ್ಯಕ್ಷರು, ವರಿಷ್ಠರು ಹೇಳಿದ್ದಾರೆ. ಅದನ್ನು ಬಿಟ್ಟು ಏನೂ ಮಾತಾಡೋಕೆ ಯಾರೂ ಹೋಗಲ್ಲ. ಪಕ್ಷದ ಹಿತದೃಷ್ಟಿಯಿಂದ ನೀಡಿದ ಸಲಹೆಗಳನ್ನು ಸ್ವೀಕರಿಸುವುದು ಅವರಿಗೆ ಬಿಟ್ಟ ವಿಚಾರ’ ಎಂದು ತಿಳಿಸಿದರು.