ವಿಜಯಸಾಕ್ಷಿ ಸುದ್ದಿ, ಗದಗ : ಡಾ. ಚಿಕ್ಕಕೊಮಾರಿಗೌಡರು ಪ್ರಗತಿಪರ ರೈತರಿಗೆ, ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಂಸ್ಥೆಗಳಿಗೆ, ಜನಪ್ರತಿನಿಧಿಗಳಿಗೆ ಮತ್ತು ತಜ್ಞರಿಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೩ನೇ ಸಾಲಿನ ದತ್ತಿ ಪ್ರಶಸ್ತಿಗೆ ಸಹಕಾರಿ ಧುರೀಣ, ಮುತ್ಸದ್ದಿ ಸಂತ ರಾಜಕಾರಣಿ, ಸತತ ನಾಲ್ಕು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ ಮಾಜಿ ಶಾಸಕ ಡಿ.ಆರ್. ಪಾಟೀಲ ಭಾಜನರಾಗಿದ್ದು, ಗದಗ ಜಿಲ್ಲಾ ಕಸಾಪ ಕಾರ್ಯದರ್ಶಿ, ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸದಸ್ಯರಾದ ಡಾ. ಕಿಶೋರಬಾಬು ಜೆ.ನಾಗರಕಟ್ಟಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಡಿ.ಆರ್. ಪಾಟೀಲರು ತಮ್ಮನ್ನು ತಾವು ಗುರುತಿಸಿಕೊಂಡಿದ್ದು, ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ದೊರೆತಿರುವುದು ಅವರ ಆತ್ಮೀಯರಿಗೆ, ಗದಗ ಜಿಲ್ಲೆಯ ಸಾಹಿತ್ಯಾಸಕ್ತರಿಗೆ, ಸಾಹಿತಿಗಳಿಗೆ ಸಂತಸವನ್ನು ತಂದಿದೆ ಎಂದು ಡಾ. ನಾಗರಕಟ್ಟಿಯವರು ತಿಳಿಸುವುದಲ್ಲದೆ, ಮುಂದಿನ ದಿನಗಳಲ್ಲಿ ಇಂತಹ ಹಲವಾರು ಪ್ರಶಸ್ತಿಗಳು ಶ್ರೀಯುತರಿಗೆ ದೊರೆಯಲೆಂದು ಆಶಯ ವ್ಯಕ್ತಪಡಿಸಿದ್ದಾರೆ.