ವಿಜಯಸಾಕ್ಷಿ ಸುದ್ದಿ, ಧಾರವಾಡ : ಕರ್ನಾಟಕ ರಾಜ್ಯ ಕಂಡ ಅಪರೂಪದ ಮೇರು ನಟ, ಹೃದಯವಂತ ಪುನೀತ ರಾಜಕುಮಾರ ಅವರು ಹೃದಯಾಘಾತದಿಂದ ನಮ್ಮನ್ನಗಲಿದರು. ಅವರ ನೆನಪಿಗಾಗಿ ಬಡವರಿಗೆ, ಸಾರ್ವಜನಿಕರಿಗೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೃದಯ ಖಾಯಿಲೆಗೆ ತಕ್ಷಣದ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ರಾಜ್ಯ ಸರಕಾರವು ದೇಶದಲ್ಲಿಯೇ ಪ್ರಥಮ ಬಾರಿಗೆ `ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಅವರು ಶುಕ್ರವಾರ ಬೆಳಿಗ್ಗೆ ಸತ್ತೂರಿನ ಡಾ. ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ ಹೃದಯ ಜ್ಯೋತಿ ಯೋಜನೆ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನೇಕ ಸಂದರ್ಭಗಳಲ್ಲಿ ವ್ಯಕ್ತಿಗೆ ಹೃದಯಾಘಾತ ಆಗುವ ಸನ್ನಿವೇಶದಲ್ಲಿ ಆಸ್ಪತ್ರೆ ತಲುಪುವ ಮೊದಲೇ ಹೃದಯ ಬಡಿತ ನಿಂತು ಹೋಗುತ್ತದೆ. ತಾಲೂಕು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿಸಿದ ಖಾಯಿಲೆಗಳಿಗೆ ತುರ್ತಾಗಿ ಸರಿಯಾದ ಚಿಕಿತ್ಸೆ ಲಭಿಸದೆ ಸಾವು ಸಂಭವಿಸುತ್ತವೆ. ಇದನ್ನು ತಡೆಗಟ್ಟಲು ಸರಕಾರ ತಾಲೂಕು ಆಸ್ಪತ್ರೆಗಳಿಗೂ ಹೃದಯ ಸಂಬಂಧಿ ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲು `ಹೃದಯ ಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾ ಆಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ವಿವಿಧ ಜಿಲ್ಲಾ ಆಸ್ಪತ್ರೆಗಳ 65 ಹೃದಯ ತಜ್ಞ ವೈದ್ಯರು ಈ ಸೇವೆ ಅನುಷ್ಠಾನದಲ್ಲಿ ಆನ್ಲೈನ್ ಸಂಪರ್ಕದಲ್ಲಿದ್ದು ರೋಗಿಯ ಆರೋಗ್ಯ ಮತ್ತು ಜೀವ ರಕ್ಷಣೆಗೆ ತಮ್ಮ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಇದೊಂದು ಮಹತ್ವದ ಯೋಜನೆಯಾಗಿದ್ದು, ಯಾವುದೇ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದರೆ ತಕ್ಷಣ ರೂ.30 ಸಾವಿರ ಮೊತ್ತದ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತದೆ. ಬರುವ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಟ್ರ್ಯಾಕೋಡ್ ಸಂಸ್ಥೆಯ ಡಾ.ಚರಿತ ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆಯುಕ್ತ ಡಿ.ರಂದೀಪ್, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಎನ್.ಸಿ.ಡಿ ಜಂಟಿ ನಿರ್ದೇಶಕ ಹಾಗೂ ಇಲಾಖೆಯ ಅಪರ ನಿರ್ದೇಶಕರಾದ ಡಾ.ಉಮಾ ಬುಗ್ಗಿ, ಎನ್.ಸಿ.ಡಿ. ಉಪ ನಿರ್ದೇಶಕ ಡಾ. ಶ್ರೀನಿವಾಸ ಜಿ.ಎ., ಐಇಸಿ ಉಪನಿರ್ದೇಶಕ ಡಾ. ಧನಂಜಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಸಮೀಕ್ಷಣಾಧಿಕಾರಿ ಪರಶುರಾಮ ಎಫ್.ಕೆ., ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸುಜಾತಾ ಹಸವಿಮಠ ಸೇರಿದಂತೆ ಇತರರು ಇದ್ದರು.
ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ ಅವರು ಸ್ವಾಗತಿಸಿ, ನಿರ್ವಹಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ನವೀನ್ ಭಟ್ ವೈ ವಂದಿಸಿದರು.
ಯೋಜನೆಯ ತರಬೇತಿ ಪುಸ್ತಕ ಬಿಡುಗಡೆ ಮಾಡಿದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಸಂತೋಷ ಲಾಡ್ ಮಾತನಾಡಿ, ಇದೊಂದು ಮಾದರಿ ಯೋಜನೆಯಾಗಿದೆ. ಬಡವರಿಗೆ, ಗ್ರಾಮೀಣ ಜನರಿಗೆ ಬಹು ಉಪಯುಕ್ತವಾಗಿದೆ. ರಾಜ್ಯ ಸರಕಾರ ಬಡವರ, ಗ್ರಾಮೀಣರ, ಮಹಿಳೆಯರ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಸಂಧ್ಯಾ ಸುರಕ್ಷಾ, ವಿಕಲಚೇತನರ ಮತ್ತು ಇಂದಿರಾ ವೃದ್ಧಾಪ್ಯ ಮುಂತಾದ ಪಿಂಚಣಿ ಯೋಜನೆಗಳನ್ನು ಈ ಹಿಂದೆ ನಮ್ಮ ಸರಕಾರವೇ ಜಾರಿಗೊಳಿಸಿದೆ. ಅಸಹಾಯಕರ, ಬಡವರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿದರು.