ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್ ನಿಂದಾಗಿ (ಶಾಖದ ಹೊಡೆತ) ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳನ್ನು ನೀಡಿದೆ.
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ, ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು.
ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು. ಬೆಳಿಗ್ಗೆ 12ರಿಂದ ಸಂಜೆ 3ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. ಸಾಕಷ್ಟು ನೀರು, ಮಜ್ಜಿಗೆ ಮತ್ತು ಗ್ಲೂಕೋಸ್/(ಓ.ಆರ್.ಎಸ್.) ಎಳನೀರಿನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು.
ಹೀಟ್ ಸ್ಟ್ರೋಕ್ ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಕೂಲಿಂಗ್ ವ್ಯವಸ್ತೆಯೊಂದಿಗೆ ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು/ಓ.ಆರ್.ಎಸ್/ಮಜ್ಜಿಗೆಯಂತಹ ಪಾನೀಯ ಬಳಸಬಹುದು. 5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿಯನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು. ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.
ಕಪ್ಪು, ನೀಲಿ ಬಣ್ಣದ ಬಟ್ಟೆ ಧರಿಸಬಾರದು. ಸಾಧ್ಯವಾದಷ್ಟು ಕಾಟನ್ ಬಟ್ಟೆ ಧರಿಸಬೇಕು.
ನೀರಿನ ಅಂಶ ಹೆಚ್ಚಾಗಿರುವ ತರಕಾರಿ/ಹಣ್ಣುಗಳನ್ನು ಸೇವಿಸುವುದು ಉತ್ತಮ. ಕಾಫಿ/ಟೀ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೆಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಬೇಕು. ಬಿಸಿ ಗಾಳಿ ಹಾಗೂ ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಸಮಿಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108/102ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.
ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ಗಳ ನಡುವೆ ಇಡಬಹುದು.