HomeDharwadಅಧಿಕಾರಿಗಳೆ ರೈತರಿಗೆ ಭರವಸೆ ತುಂಬಿ

ಅಧಿಕಾರಿಗಳೆ ರೈತರಿಗೆ ಭರವಸೆ ತುಂಬಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ, ಬರ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದು, ಯಾವುದೇ ಗ್ರಾಮ, ಪಟ್ಟಣಗಳಿಗೆ ಕುಡಿಯುವ ನೀರಿನ ಕೊರತೆ ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ ಮುಂದಿನ ದಿನಗಳಲ್ಲಿಯೂ ಅಧಿಕಾರಿಗಳು ಈ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ಬರ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್‌ವರೆಗೆ ಅಗತ್ಯವಿರುವಷ್ಟು ಮೇವು ದಾಸ್ತಾನು ಇದೆ. ರೈತರು ಸಹ ಮೇವು ಬಣವೆ ಹೊಂದಿದ್ದಾರೆ. ಆದರೂ ರೈತರಿಗೆ ಸರಕಾರದ ನೆರವು, ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ ಎಂಬುದನ್ನು ಮನವರಿಕೆ ಮಾಡಲಾಗಿದೆ. ಕೃಷಿ ಭೂಮಿ ರಹಿತರು ಮತ್ತು ಹೈನುಗಾರಿಕೆ ಮಾಡುವವರಿಗೂ ಅನುಕೂಲವಾಗಲೆಂದು ಜಿಲ್ಲೆಯ ವಿವಿಧೆಡೆ ಬೇಡಿಕೆಗೆ ಅನುಗುಣವಾಗಿ ಆರು ಸ್ಥಳಗಳಲ್ಲಿ ಮೇವು ಬ್ಯಾಂಕುಗಳನ್ನು ತೆರೆಯಲಾಗಿದೆ. ರೈತರಿಗೆ ಈ ಕುರಿತು ಮಾಹಿತಿ ನೀಡಿದ್ದು, ರೈತರು ಅಗತ್ಯವಿದ್ದಾಗ ಮೇವು ಬ್ಯಾಂಕಿನಿಂದ ನಿಯಮಾನುಸಾರ ಮೇವು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಬರಗಾಲದ ಹಿನ್ನೆಲೆಯಲ್ಲಿ ನರೇಗಾ ಕೂಲಿ ನೀಡುವಾಗ `ಒಂದು ಗ್ರಾಮ ಒಂದು ಕೆರೆ ಯೋಜನೆ’ ಮಾಡಿಕೊಂಡು ಆಯಾ ಗ್ರಾಮದ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಂದ ಅವರದ್ದೇ ಊರಿನ ಒಂದು ಕೆರೆಯನ್ನು ಸಮಗ್ರ ಅಭಿವೃದ್ಧಿ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿ.ಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ರವಿ ಸಾಲಿಗೌಡರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ಸೇರಿದಂತೆ ಎಲ್ಲಾ ತಾಲೂಕುಗಳ ತಹಸೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img