ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರನ್ವಯ ಯಾವುದೇ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಬಹು ವಿವಿಧ ಚಟುವಟಿಕೆಗಳಲ್ಲಿ 18 ವರ್ಷ ಪೂರ್ವದ ಮಕ್ಕಳನ್ನು ತೊಡಗಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಂದರೆ ಮಕ್ಕಳನ್ನು ಯಾವುದೇ ಚುಣಾವಣಾ ಪ್ರಚಾರದಲ್ಲಿ ಬಳಸದಂತೆ ಕರಪತ್ರ ಹಾಗೂ ಪೋಸ್ಟರ್ ಹಂಚಲು ಅಥವಾ ಘೋಷಣೆ ಕೂಗುವುದು, ಚುನಾವಣಾ ಸಭೆ, ಹೋಲ್ಡಿಂಗ್ ಕಟ್ಟುವುದು, ಪ್ರಚಾರ ವಾಹನದ ಮೇಲೆ ಮಕ್ಕಳನ್ನು ಕೂರಿಸುವುದು, ಒಟ್ಟಾರೆಯಾಗಿ ಪ್ರಚಾರ ಸಭೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶಿಸಲಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಯಾವುದೇ ಪಕ್ಷಗಳು ಚುನಾವಣಾ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಕ್ರಮವಹಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ಕಾಯ್ದೆಯ ಕಲಂಗಳ ಅನ್ವಯ ಅಗತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.